ಹೊಸಕೋಟೆ: ‘ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಸಿಬ್ಬಂದಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಅವರಿಗೆ ಸಹಕಾರಿಯಾಗುವ ಉದ್ದೇಶದಿಂದ ₹5 ಲಕ್ಷ ಮೌಲ್ಯದ ವೈದ್ಯಕೀಯ ಪರಿಕರಗಳನ್ನು ನೀಡುತ್ತಿದ್ದೇನೆ’ ಎಂದು ಪೌರಾಡಳಿತ ಮತ್ತು ಸಕ್ಕರೆ ಖಾತೆ ಸಚಿವ ಎಂಟಿಬಿ ನಾಗರಾಜ್ ತಿಳಿಸಿದರು.
ತಾಲ್ಲೂಕಿನಲ್ಲಿ ಕೊರೊನಾ ಸೋಂಕಿತರು ಹೆಚ್ಚಾಗಿದ್ದು ಸರ್ಕಾರಿ ಆಸ್ಪತ್ರೆಯ ಮೇಲೆ ಒತ್ತಡ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಇಲ್ಲಿನ ಆಸ್ಪತ್ರೆಯ ಮೇಲ್ವಿಚಾರಕರ ಅಪೇಕ್ಷೆಯಂತೆ ತಮ್ಮ ಸ್ವಂತ ಖರ್ಚಿನಲ್ಲಿ ಆಸ್ಪತ್ರೆಗೆ 11 ಆಮ್ಲಜನಕದ ಹಾಸಿಗೆಗಳನ್ನು ನೀಡುತ್ತಿರುವುದಾಗಿ ಸಚಿವರು ತಿಳಿಸಿದರು.
‘ಲಾಕ್ಡೌನ್ ಮುಂದುವರಿಕೆಯ ಬಗ್ಗೆ ಮುಖ್ಯಮಂತ್ರಿಯವರು ತೀರ್ಮಾನ ತೆಗೆದುಕೊಂಡಿದ್ದಾರೆ. ತಮ್ಮ ವೈಯಕ್ತಿಕ ಅಭಿಪ್ರಾಯದಲ್ಲಿಯೂ ಲಾಕ್ಡೌನ್ ಮುಂದುವರೆಯಬೇಕು. ಜೊತೆಗೆ ಸಾರ್ವಜನಿಕರು ಮತ್ತು ಸಂಘ ಸಂಸ್ಥೆಗಳೂ ಲಾಕ್ಡೌನ್ ಪಾಲಿಸಬೇಕು’ ಎಂದರು.
ಕಾರ್ಯಕ್ರಮದಲ್ಲಿ ಆಸ್ಪತ್ರೆಯ ಮೇಲ್ವಿಚಾರಕರಾದ ಡಾ. ಸತೀಶ್, ನಗರಸಭಾಧ್ಯಕ್ಷ ಅರುಣ್ ಕುಮಾರ್, ಆಸ್ಪತ್ರೆಯ ಮೇಲ್ವಿಚಾರಣಾ ಸಮಿತಿ ಸದಸ್ಯ ಬಾಲಚಂದ್ರ, ಜಿಲ್ಲಾ ಪಂಚಾಯಿತಿ ಸದಸ್ಯ ನಾಗರಾಜ್ ಭಾಗವಹಿಸಿದ್ದರು.