ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕಡೂರಿನ ಮಾಜಿ ಶಾಸಕ ಡಾ. ವೈ.ಸಿ. ವಿಶ್ವನಾಥ್ ಅವರು ಬೆಂಗಳೂರಿನ ಅಪೋಲೊ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾದರು.
ಕಡೂರು ತಾಲ್ಲೂಕಿನ ಯಳ್ಳಂಬಳಸೆಯಲ್ಲಿರುವ ಅವರ ಮನೆಯಲ್ಲಿ ವಿಶ್ವನಾಥ್ ಗುರುವಾರ ರಾತ್ರಿ ಅಸ್ವಸ್ಥರಾದರು. ತಕ್ಷಣ ಅವರನ್ನು ಕಡೂರಿನ ಮಾರುತಿ ನರ್ಸೀಂಗ್ ಹೋಮ್ಗೆ ಕರೆದೊಯ್ಯಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆತರಲಾಗಿತ್ತು.
2010ರಲ್ಲಿ ನಡೆದ ಕಡೂರು ವಿಧಾನಸಭಾ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ವೈ.ಎಸ್.ವಿ. ದತ್ತ ಅವರನ್ನು ಮಣಿಸಿ ಶಾಸಕರಾಗಿ ಆಯ್ಕೆಯಾಗಿದ್ದರು.
ಬಿಜೆಪಿಯಲ್ಲಿ ಸಕ್ರಿಯರಾಗಿದ್ದ ವಿಶ್ವನಾಥ್ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಡೂರು ಕ್ಷೇತ್ರದಿಂದ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಬೆಳ್ಳಿಪ್ರಕಾಶ್ ಪರ ಪ್ರಚಾರ ನಡೆಸಿದ್ದರು.
ವೃತ್ತಿಯಲ್ಲಿ ವೈದ್ಯರಾಗಿದ್ದ ವಿಶ್ವನಾಥ್ ಕಡೂರಿನಲ್ಲಿ ಮಾರುತಿ ನರ್ಸಿಂಗ್ ಹೋಮ್ ಹೆಸರಿನ ಆಸ್ಪತ್ರೆ ನಡೆಸುತ್ತಿದ್ದಾರೆ. ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಉತ್ತಮ ಪ್ರಸೂತಿ ತಜ್ಞ ಎಂದು ಖ್ಯಾತರಾಗಿದ್ದಾರೆ.