ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹೊಸದಾಗಿ 188 ಇಂದಿರಾ ಕ್ಯಾಂಟೀನ್‌ ಆರಂಭ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಮಾನ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟೀನ್‌ ಉದ್ಘಾಟಿಸಿದ ಸಿ.ಎಂ ಸಿದ್ದರಾಮಯ್ಯ
Published 11 ಮಾರ್ಚ್ 2024, 16:24 IST
Last Updated 11 ಮಾರ್ಚ್ 2024, 16:24 IST
ಅಕ್ಷರ ಗಾತ್ರ

ದೇವನಹಳ್ಳಿ: ರಾಜ್ಯದಲ್ಲಿ ಹೊಸದಾಗಿ 188 ಇಂದಿರಾ ಕ್ಯಾಂಟೀನ್‌ ನಿರ್ಮಾಣಕ್ಕೆ ಅನುಮೋದನೆ ದೊರೆತಿದ್ದು, ಶೀಘ್ರವೇ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಇಲ್ಲಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಪಿ–7 ಪಾರ್ಕಿಂಗ್‌ ಸಮೀಪ ಇಂದಿರಾ ಕ್ಯಾಂಟಿನ್ ಅನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.

ಬೆಂಗಳೂರು ಸೇರಿದಂತೆ ರಾಜ್ಯದಾದಂತ್ಯ 600 ಕ್ಯಾಂಟೀನ್‌ ಕೂಲಿ‌ ಕಾರ್ಮಿಕರು, ಬಡವರ ಹಸಿವು ನೀಗಿಸುತ್ತಿದೆ. ಹೊಸದಾಗಿ 188 ಕ್ಯಾಂಟೀನ್ ಪ್ರಾರಂಭಿಸುತ್ತಿದ್ದೇವೆ. ಈ ಪೈಕಿ ಈಗಾಗಲೇ 40 ಸಿದ್ಧವಾಗಿದ್ದು, ಉಳಿದ್ದು ಸಿದ್ದಗೊಳ್ಳುತ್ತಿದೆ ಎಂದು ತಿಳಿಸಿದರು.

ವಿಮಾನ ನಿಲ್ದಾಣದ ಬಳಿ ಇಂದಿರಾ ಕ್ಯಾಂಟೀನ್‌ ಆರಂಭಿಸಬೇಕೆಂಬ ಟ್ಯಾಕ್ಸಿ ಚಾಲಕರು ಹಾಗೂ ಇತರೆ ಚಾಲಕರ ಬೇಡಿಕೆಯಂತೆ ಕ್ಯಾಂಟೀನ್‌ ತೆರೆಯಲಾಗಿದೆ. ಟರ್ಮಿನಲ್‌–2 ಬಳಿಯೂ ಮತ್ತೊಂದು ಕ್ಯಾಂಟೀನ್‌ ನಿರ್ಮಿಸಲಾಗುವುದು ಎಂದು ಹೇಳಿದರು.

ಬಡವರಿಗೆ ಕಡಿಮೆ ದರಗಳಲ್ಲಿ ಊಟ ತಿಂಡಿ ದೊರೆಯಬೇಕೆ ಎನ್ನುವುದು ಸರ್ಕಾರದ ಉದ್ದೇಶ. ಬೆಳಗಿನ ಉಪಾಹಾರ ₹5, ಮಧ್ಯಾಹ್ನ ಮತ್ತು ರಾತ್ರಿ ಊಟ ₹10ಗೆ ದೊರೆಯಲಿದೆ. ಆಹಾರದ ಮೆನು ಕೂಡ ಬದಲಾಯಿಸಲಾಗಿದೆ. ಕುಳಿತು ಆಹಾರ ಸೇವಿಸಲು ಅನುಕೂಲ ಆಗುವಂತೆ ಡೈನಿಂಗ್ ಹಾಲ್ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ವಿಮಾನ ನಿಲ್ದಾಣದ ಬಳಿಯ ಇಂದಿರಾ ಕ್ಯಾಂಟೀನ್‌ನಲ್ಲಿ ಊಟಕ್ಕಾಗಿ ಮುಗಿಬಿದ್ದ ಟ್ಯಾಕ್ಸಿ ಮತ್ತು ಕ್ಯಾಬ್ ಚಾಲಕರು
ವಿಮಾನ ನಿಲ್ದಾಣದ ಬಳಿಯ ಇಂದಿರಾ ಕ್ಯಾಂಟೀನ್‌ನಲ್ಲಿ ಊಟಕ್ಕಾಗಿ ಮುಗಿಬಿದ್ದ ಟ್ಯಾಕ್ಸಿ ಮತ್ತು ಕ್ಯಾಬ್ ಚಾಲಕರು

ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ

ಬೆಂಗಳೂರಿನ ಕುಡಿಯುವ ನೀರಿನ ವಿಷಯಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಕುಡಿಯುವ ನೀರಿಗೆ ತೊಂದರೆಯಾಗಬಾರದು ಎಂದು ಸ್ಪಷ್ಟ ಸೂಚನೆ ನೀಡಲಾಗಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೂ ಕೂಡ 2-3 ಸಭೆ ನಡೆಸಿ ಎಷ್ಟೇ ಹಣ ವೆಚ್ಚವಾದರೂ ಟ್ಯಾಂಕರ್ ಹೊಸ ಕೊಳವೆಬಾವಿಗಳಿರಬಹುದು ಅಥವಾ ಕಾವೇರಿ ನೀರನ್ನಾದರೂ ಕೊಡುವ ಮೂಲಕ ಸಮಸ್ಯೆ ಬಗೆಹರಿಸುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT