ವಿಜಯಪುರ(ಬೆಂ.ಗ್ರಾಮಾಂತರ):ಪಟ್ಟಣದ 8ನೇ ವಾರ್ಡಿನ ಸರ್ಕಲ್ ಇನ್ಸ್ಪೆಕ್ಟರ್ ಕಚೇರಿ ಪಕ್ಕದಲ್ಲಿರುವ ಅಂಗನವಾಡಿ ಕೇಂದ್ರದ ಸುತ್ತಲೂ ಗಿಡಗಂಟಿಗಳು ಹೆಚ್ಚಾಗಿ ಬೆಳೆದಿರುವ ಕಾರಣ, ಮಕ್ಕಳು ಭಯಪಡುವಂತಾಗಿದೆ. ಈ ಕೇಂದ್ರಕ್ಕೆ ಕಾಂಪೌಂಡ್ ನಿರ್ಮಾಣ ಮಾಡಬೇಕು ಎಂದು ಪೋಷಕರು ಒತ್ತಾಯಿಸಿದ್ದಾರೆ.
ಅಂಗನವಾಡಿಗೆ ಮಕ್ಕಳನ್ನು ಕಳುಹಿಸಲು ಭಯವಾಗುತ್ತದೆ. ಗಿಡಗಂಟಿಗಳು ಹೆಚ್ಚಾಗಿ ಬೆಳೆದಿರುವುದರಿಂದ ಆಗಾಗ್ಗೆ ಹಾವುಗಳು ಪ್ರತ್ಯಕ್ಷವಾಗುತ್ತವೆ. ಸೊಳ್ಳೆ ಕಾಟ ಜಾಸ್ತಿಯಾಗಿದೆ. ಗಿಡಗಂಟಿಗಳನ್ನು ಸ್ವಚ್ಛಗೊಳಿಸಿ ಕಾಂಪೌಂಡ್ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಈ ಕೇಂದ್ರಕ್ಕೆ ಸರಿಯಾದ ರಸ್ತೆಯಿಲ್ಲ. ಸಾಹಿತ್ಯ ಪರಿಷತ್ತಿನ ಭವನದ ಒಳಗಿನಿಂದ ಹೋಗಬೇಕಾಗಿದೆ. ಶುದ್ಧ ಕುಡಿಯುವ ನೀರಿನ ಘಟಕದ ಕಡೆಯಿಂದ ಬರುವ, ಉರ್ದು ಶಾಲೆ ಕಡೆಯಿಂದ ಬರುವ ರಸ್ತೆಯನ್ನೂ ಮುಚ್ಚಿದ್ದಾರೆ. ಮಕ್ಕಳು ಓಡಾಡಲು ತುಂಬಾ ಕಷ್ಟವಾಗುತ್ತಿದೆ ಎಂದು ದೂರಿದ್ದಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯವರು ಈ ಅಂಗನವಾಡಿಗೆ ದಾರಿ ಮಾಡಬೇಕು ಎಂದು ಕೋರಿದ್ದಾರೆ.
ಅಂಗನವಾಡಿ ಕಾರ್ಯಕರ್ತೆ ಮಾತನಾಡಿ, ‘ಸ್ಥಳೀಯ ಪುರಸಭಾ ಸದಸ್ಯರು ಎರಡು ಬಾರಿ ಗಿಡಗಂಟಿಗಳನ್ನು ಸ್ವಚ್ಛ ಮಾಡಿಸಿದ್ದಾರೆ. ಆದರೂ, ಗಿಡಗಳು ಬೆಳೆಯುತ್ತಲೇ ಇವೆ. ಕಾಂಪೌಂಡ್ ನಿರ್ಮಿಸಿದರೆ ಮಕ್ಕಳ ಸುರಕ್ಷಿತ ಕಲಿಕೆಗೆ ಸಹಕಾರಿಯಾಗುತ್ತದೆ’ ಎಂದರು.