ಆನೇಕಲ್: ಅಪರಾಧ ತಡೆಯುವಲ್ಲಿ ಪೊಲೀಸರು ಕಟ್ಟುನಿಟ್ಟಿನ ಕ್ರಮಕೈಗೊಳ್ಳುವ ಮೂಲಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಬೇಕು. ಪೊಲೀಸರು ಜನಸ್ನೇಹಿಯಾಗಿ ಕೆಲಸ ಮಾಡುವ ಮೂಲಕ ಜನರ ವಿಶ್ವಾಸ ಗಳಿಸಬೇಕು ಮತ್ತು ಅಪರಾಧಿಗಳನ್ನು ಮಟ್ಟಹಾಕಬೇಕು ಎಂದು ಹೆಚ್ಚುವರಿ ಎಸ್ಪಿ ಲಕ್ಷ್ಮೀ ಗಣೇಶ್ ತಿಳಿಸಿದರು.
ಅವರು ಪಟ್ಟಣದ ಎಎಸ್ಬಿ ಕಾಲೇಜ್ ಮೈದಾನದಲ್ಲಿ ನಡೆದ ಪೊಲೀಸ್ ಪೆರೇಡ್ನಲ್ಲಿ ಪೊಲೀಸರಿಂದ ಗೌರವ ವಂದನೆ ಸ್ವೀಕರಿಸಿ ಮಾತನಾಡಿದರು.
ಪೊಲೀಸರೆಂದರೆ ಶಿಸ್ತಿನ ಸಿಪಾಯಿಗಳು. ಸದಾ ಸಾರ್ವಜನಿಕರ ಸೇವೆಗೆ ಸಿದ್ಧರಾಗಿರಬೇಕು. ಸಾರ್ವಜನಿಕರಿಂದ ಯಾವುದೇ ದೂರುಗಳು ಬಂದಲ್ಲಿ ತಕ್ಷಣ ಸ್ಪಂದಿಸಿ ಪರಿಹಾರ ಮಾಡಬೇಕು. ಕೊರೊನಾ ಹಿನ್ನೆಲೆಯಲ್ಲಿ ಪೊಲೀಸ್ ಕವಾಯತು ನಡೆದಿರಲಿಲ್ಲ. ಪೊಲೀಸರಲ್ಲಿ ವೃತ್ತಿಪರತೆ ಹೆಚ್ಚಿಸಲು ಮತ್ತು ಪರಸ್ಪರ ವಿಷಯಗಳನ್ನು ವಿನಿಮಯ ಮಾಡಿಕೊಳ್ಳಲು ಕವಾಯತು ಉಪಯುಕ್ತ. ಹಾಗಾಗಿ ಪರೇಡ್ ಪ್ರಾರಂಭಿಸಲಾಗಿದೆ ಎಂದರು.
ಶಾಲಾ ಕಾಲೇಜುಗಳು ಪ್ರಾರಂಭವಾಗಿವೆ. ಕಾಲೇಜುಗಳ ಬಳಿ ಯಾವುದೇ ಅಹಿತಕರ ಘಟನೆಗಳು, ಧೂಮಪಾನ, ಮಾದಕ ವಸ್ತುಗಳ ಮಾರಾಟ ಸೇರಿದಂತೆ ಕಾನೂನು ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು. ಪೊಲೀಸರು ನಿಯಮಿತವಾಗಿ ಬೀಟ್ ನಡೆಸಿ ಪರಿಸ್ಥಿತಿ ಅವಲೋಕಿಸಬೇಕು. ಪ್ರತಿ ಸಂದರ್ಭದಲ್ಲೂ ಸೂಕ್ಷ್ಮವಾಗಿ ಗಮನಿಸುವ ಮೂಲಕ ಅಪರಾಧಿಗಳ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಗುಪ್ತಚರ ವಿಭಾಗ ಬಲಪಡಿಸಬೇಕು ಎಂದರು.
ರೌಡಿಸಂ ಚಟುವಟಿಕೆ ಬಗ್ಗೆ ಪೊಲೀಸರಿಗೆ ಸಾರ್ವಜನಿಕರು ಮಾಹಿತಿ ನೀಡಬೇಕು. ಮಾಹಿತಿದಾರರ ಬಗೆಗಿನ ಮಾಹಿತಿ ಗೌಪ್ಯವಾಗಿಡಲಾಗುವುದು. ರೌಡಿಸಂ ಚಟುವಟಿಕೆಗಳಲ್ಲಿ ಭಾಗಿಯಾಗುವವರಿಗೆ ಯಾವುದೇ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲು ಆನೇಕಲ್ ಉಪವಿಭಾಗದ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದರು.
ಆನೇಕಲ್ ಸುತ್ತಮುತ್ತ ಕಲ್ಲುಗಣಿಗಾರಿಕೆ ಕ್ವಾರಿಗಳಿವೆ. ಸ್ಫೋಟಕ ವಸ್ತುಗಳಿಂದ ಈಚೆಗೆ ಚಿಕ್ಕಬಳ್ಳಾಪುರ, ಶಿವಮೊಗ್ಗದಲ್ಲಿ ಅನಾಹುತಗಳು ಸಂಭವಿಸಿವೆ. ಈ ಹಿನ್ನೆಲೆಯಲ್ಲಿ ಕ್ವಾರಿಗಳ ಬಗ್ಗೆ ನಿಗಾಯಿಡಬೇಕು. ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಕ್ರಮ ಕೈಗೊಳ್ಳಬೇಕು ಎಂದರು.
ಮೀಸಲು ಪಡೆ ಡಿವೈಎಸ್ಪಿ ಜಯರಾಮ್, ಸರ್ಕಲ್ ಇನ್ಸ್ಪೆಕ್ಟರ್ಗಳಾದ ಕೆ.ವಿಶ್ವನಾಥ್, ಶೇಖರ್, ಗೌತಮ್, ರವೀಂದ್ರ, ಸಬ್ಇನ್ಸ್ಪೆಕ್ಟರ್ಗಳಾದ ಮಧುಸೂದನ್, ಬಿ.ಟಿ.ಗೋವಿಂದ್, ಮುರಳೀಧರ, ಹರೀಶ್, ಶಿವಾನಂದ ನಾಯಕ್, ರಾಕೇಶ್, ಗೋವಿಂದ್ ಇದ್ದರು.