ಶ್ರೀನಿವಾಸಪುರ: ‘ಸಾರ್ವಜನಿಕರು ಕಂದಾಯ ಹಾಗೂ ಪಿಂಚಣಿ ಅದಾಲತ್ನ ಪ್ರಯೋಜನ ಪಡೆದುಕೊಳ್ಳಬೇಕು. ಸರ್ಕಾರದ ನಿಯಮಾನುಸಾರ ಅದಾಲತ್ನಲ್ಲಿ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಲ್ಪಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಸತ್ಯಭಾಮ ಹೇಳಿದರು.
ಪಟ್ಟಣದ ಸರ್ಕಾರಿ ನೌಕರರ ಭವನದ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಪಿಂಚಣಿ ಮತ್ತು ಕಂದಾಯ ಅದಾಲತ್ ಕಾರ್ಯಕ್ರಮದಲ್ಲಿ ವಿವಿಧ ಯೋಜನೆಯಡಿ ಫಲಾನುಭವಿಗಳಿಗೆ ಮಂಜೂರಾತಿ ಆದೇಶ ಪತ್ರ ವಿತರಿಸಿ ಅವರು ಮಾತನಾಡಿದರು.
ಹೋಬಳಿ ಮಟ್ಟದಲ್ಲಿ ಅದಾಲತ್ ನಡೆಸಿ ಮಂಜೂರಾತಿ ಪತ್ರ ವಿತರಿಸುತ್ತಿರುವುದರಿಂದ ಫಲಾನುಭವಿಗಳಿಗೆ ಹೆಚ್ಚಿನ ಅನುಕೂಲವಾಗಿದೆ ಎಂದು ಹೇಳಿದರು.
ಎಲ್ಲ ಸಮಸ್ಯೆಗಳಿಗೂ ಸ್ಥಳದಲ್ಲಿ ಪರಿಹಾರ ನೀಡಲು ಸಾಧ್ಯವಾಗುವುದಿಲ್ಲ. ಅರ್ಜಿ ಸಲ್ಲಿಸಿದ ಸುಮಾರು ಒಂದರಿಂದ ಒಂದೂವರೆ ತಿಂಗಳ ಕಾಲ ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆಯನ್ನು ಅಧ್ಯಯನ ಮಾಡಿ ಪರಿಹಾರ ನೀಡುತ್ತಾರೆ. ಆದ್ದರಿಂದ ಅರ್ಜಿ ನೀಡಿದವರು ಹತಾಶರಾಗಬೇಕಾದ ಅಗತ್ಯ ಇಲ್ಲ. ಎಲ್ಲ ಅರ್ಜಿಗಳನ್ನೂ ನಿಯಮಾನುಸಾರ ಇತ್ಯರ್ಥಪಡಿಸಲಾಗುವುದು ಎಂದು ತಿಳಿಸಿದರು.
ಸಾರ್ವಜನಿಕರು ಕೊರೊನಾ ಬಗ್ಗೆ ಅಸಡ್ಡೆ ತೋರಬಾರದು. ಕೊರೊನಾ ವಿಷಯದಲ್ಲಿ ಸರ್ಕಾರದ ನಿಯಮಗಳನ್ನು ತಪ್ಪದೆ ಪಾಲಿಸಬೇಕು. ಕೆಲವರು ಕೊರೊನಾ ಸೋಂಕು ತಡೆಗಟ್ಟುವ ಸಂಬಂಧ ಸಿಬ್ಬಂದಿಯ ಕಾರ್ಯ ನಿರ್ವಹಣೆ ಕುರಿತು ಹಗುರವಾಗಿ ಮಾತನಾಡುವುದು ಸರಿಯಲ್ಲ. ಸಮಸ್ಯೆ ಗಂಭೀರವಾಗಿದೆ ಎಂಬುದನ್ನು ಅರಿಯಬೇಕು. ಯಾವುದೇ ಕಾರಣಕ್ಕೂ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೆ ಸಂಚರಿಸಬಾರದು. ಸಾಮಾಜಿಕ ಅಂತರ ಪಾಲನೆ ಕಡ್ಡಾಯ. ನಿಯಮಿತವಾಗಿ ಕೈ ತೊಳೆಯುವುದನ್ನು ಮರೆಯಬಾರದು ಎಂದು ಸಲಹೆ ನೀಡಿದರು.
ವಿವಿಧ ಯೋಜನೆಯಡಿ 66 ಫಲಾನುಭವಿಗಳಿಗೆ ಮಂಜೂರಾತಿ ಆದೇಶ ಪತ್ರ ವಿತರಿಸಲಾಗಿದೆ. 266ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿದ್ದು, ಅವುಗಳನ್ನು ಹಂತ ಹಂತವಾಗಿ ಪರಿಶೀಲಿಸಿ ಇತ್ಯರ್ಥಪಡಿಸಲಾಗುವುದು ಎಂದು ಹೇಳಿದರು.
ತಹಶೀಲ್ದಾರ್ ಎಸ್.ಎಂ. ಶ್ರೀನಿವಾಸ್, ಉಪ ತಹಶೀಲ್ದಾರ್ ಮಲ್ಲೇಶ್, ಹಿರಿಯ ಕಂದಾಯ ನಿರೀಕ್ಷಕ ಬಿ.ವಿ. ಮುನಿರೆಡ್ಡಿ, ಗುರುರಾಜ ರಾವ್, ಮುನಿವೆಂಕಟಪ್ಪ, ಹರಿ ಹಾಜರಿದ್ದರು.