ಆನೇಕಲ್: ಆನೇಕಲ್ ದೊಡ್ಡಕೆರೆಯನ್ನು ಅಭಿವೃದ್ಧಿಪಡಿಸಿ ಏತ ನೀರಾವರಿ ಮೂಲಕ ಕೆರೆಗೆ ನೀರು ತುಂಬುವ ಕಾರ್ಯ ಕೈಗೊಳ್ಳಲಾಗುವುದು. ದೊಡ್ಡ ಕೆರೆ ಅಭಿವೃದ್ಧಿಗೆ ಕಂಪನಿಗಳ ಸಿಎಸ್ಆರ್ ನಿಧಿ ಮತ್ತು ಸರ್ಕಾರದ ಅನುದಾನವನ್ನು ಬಳಕೆ ಮಾಡಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಬಿ. ಶಿವಣ್ಣ ತಿಳಿಸಿದರು.
ಪಟ್ಟಣದ ನೀರಿನ ಸಮಸ್ಯೆ ನಿವಾರಣೆಗಾಗಿ ಪುರಸಭೆಯಿಂದ ಕೊಳವೆ ಬಾವಿಗಳನ್ನು ಕೊರೆಯಿಸುವ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ತಾಲ್ಲೂಕಿನ 73 ಕೆರೆಗಳಿಗೆ ಕೆ.ಸಿ ವ್ಯಾಲಿ ಮೂಲಕ ನೀರು ತುಂಬುವ ಕಾರ್ಯ ಪ್ರಗತಿಯಲ್ಲಿದೆ. ಆನೇಕಲ್ ದೊಡ್ಡಕೆರೆಗೆ ಎರಡು ಮೂರು ತಿಂಗಳಲ್ಲಿ ನೀರು ಬರಲಿದೆ. ಇದಕ್ಕೆ ಪೂರ್ವಭಾವಿಯಾಗಿ ಕೆರೆ ಒತ್ತುವರಿ ತೆರವುಗೊಳಿಸಿ ಕೆರೆಯನ್ನು ಅಭಿವೃದ್ಧಿಪಡಿಸುವ ಕಾರ್ಯಕ್ಕೆ ಆದ್ಯತೆ ನೀಡಲಾಗುವುದು ಎಂದರು.
ಆನೇಕಲ್ಗೆ 3 ಎಂಎಲ್ಡಿ ಕಾವೇರಿ ನೀರು ಸರಬರಾಜಾಗುತ್ತಿದೆ. ಕಾವೇರಿ ನೀರು ಪೂರೈಕೆಗಾಗಿ ನಿರ್ಮಿಸಿರುವ ಜಲಸಂಗ್ರಹಗಾರ ಕಿರಿದಾಗಿದೆ. ಮುಂಬರುವ ದಿನಗಳಲ್ಲಿ ಮತ್ತೊಂದು ಜಲಸಂಗ್ರಹಗಾರ ನಿರ್ಮಿಸಿ ಪಟ್ಟಣಕ್ಕೆ ಕುಡಿಯುವ ನೀರಿನ ಪೂರೈಕೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.