ದೊಡ್ಡಬಳ್ಳಾಪುರ: ದೊಡ್ಡಬೆಳವಂಗಲ ಕ್ರಿಕೆಟ್ ಟೂರ್ನಿ ವೇಳೆ ನಡೆದ ಗಲಾಟೆಯಲ್ಲಿ ಚಾಕು ಇರಿದು ಯುವಕರಿಬ್ಬರನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಭಾನುವಾರ ಬೆಳಗಿನ ಜಾವ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.
ಪ್ರಮುಖ ಆರೋಪಿ ಹುಲಿಕುಂಟೆ ಗ್ರಾಮದ ವಿನಯ್ ಮತ್ತು ತ್ರಿಮೂರ್ತಿ ಎಂಬುವರನ್ನು ಪೊಲೀಸರು ಬಂಧಿಸಿ ದ್ದಾರೆ. ತಲೆ ಮರೆಸಿಕೊಂಡಿರುವ ಇನ್ನೂ ಮೂವರು ಆರೋಪಿಗಳಿಗಾಗಿ ಪೊಲೀ ಸರು ಹುಡುಕಾಟ ನಡೆಸಿದ್ದಾರೆ. ತಲೆ ಮರೆಸಿಕೊಂಡಿರುವ ಆರೋಪಿಗಳಲ್ಲಿ ವಿನಯ್ ಸಹೋದರ ಅನಿಲ್ ಕೂಡ ಇದ್ದಾನೆ. ಈ ಇಬ್ಬರೂ ಹುಲಿಕುಂಟೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರಾಗಿದ್ದ ಕಾಂಗ್ರೆಸ್ ಮುಖಂಡರೊಬ್ಬರ ಮಕ್ಕಳು ಎಂದು ಪೊಲೀಸರು ತಿಳಿಸಿದ್ದಾರೆ. ನಗರದ ಡಿ.ಕ್ರಾಸ್ ಸಮೀಪದ ರೈಲ್ವೆ ಗೇಟ್ ಬಳಿ ಆರೋಪಿಗಳು ಅಡಗಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಪೊಲೀಸರು ಬೆಳಗಿನ ಜಾವ ಅಲ್ಲಿಗೆ ತೆರಳಿದ್ದರು. ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪಿಗಳು ತಪ್ಪಿಸಿಕೊಳ್ಳಲು ಯತ್ನಿಸಿದಾಗ ಅವರ ಕಾಲಿಗೆ ಗುಂಡು ಹೊಡೆದು ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಗೊಂಡಿರುವ ಪೊಲೀಸ್ ಸಿಬ್ಬಂದಿ ಕರಾರ್ ಹುಸೇನ್, ಸುನೀಲ್ ಬಾಸಗಿ ಮತ್ತು ಆರೋಪಿಗಳನ್ನು ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗಿದೆ. ಆರೋಪಿಗಳೆಲ್ಲರೂ ಪುಡಿ ರೌಡಿಗಳಾಗಿದ್ದು ಹುಲಿಕುಂಟೆ ಗ್ರಾಮದ ಸುತ್ತಮುತ್ತ ಅಪರಾಧ ಚಟುವಟಿಕೆಗಳಲ್ಲಿ ತೊಡಗಿದ್ದರು. ತಲೆಮರೆಸಿಕೊಂಡಿರುವ ಅನಿಲ್, ಕೋರಿ, ದೀಪು ಎಂಬುವರನ್ನು ಶೀಘ್ರ ಬಂಧಿಸುವುದಾಗಿ ಪೊಲೀಸರು ಹೇಳಿದ್ದಾರೆ.
ದೊಡ್ಡಬಳ್ಳಾಪುರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಧೀರಜ್ ಮುನಿರಾಜು ಎಂಬುವರು ದೊಡ್ಡಬೆಳವಂಗಲದಲ್ಲಿ ಶುಕ್ರವಾರ ಕ್ರಿಕೆಟ್ ಟೂರ್ನಿ ಆಯೋಜಿಸಿದ್ದರು. ಮೈದಾನದಲ್ಲಿ ಕಾರು ಪಾರ್ಕಿಂಗ್ ವಿಚಾರವಾಗಿ ಗಲಾಟೆ ನಡೆದಿತ್ತು. ಆಗ ಒಂದು ಗುಂಪು ಭರತ್ ಕುಮಾರ್ ಮತ್ತು ಪ್ರತೀಕ್ ಎಂಬ ಯುವಕರನ್ನು ಚಾಕುವಿನಿಂದ ಬರ್ಬರವಾಗಿ ಇರಿದು ಹತ್ಯೆ ಮಾಡಿ ಪರಾರಿಯಾಗಿತ್ತು.
ರಾಜಕಾರಣಿಗಳು ಆಯೋಜಿಸುವ ಪಂದ್ಯಾವಳಿಗೆ ನಿರ್ಬಂಧ: ಎಸ್.ಪಿ
ದೊಡ್ಡಬೆಳವಂಗಲದಲ್ಲಿ ಕ್ರಿಕೆಟ್ ಪಂದ್ಯಾವಳಿ ವೇಳೆ ನಡೆದ ಗಲಾಟೆಯಲ್ಲಿ ಇಬ್ಬರು ಕೊಲೆಯಾದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಇಲಾಖೆಯು ರಾಜಕೀಯ ಪ್ರೇರಿತ ಪಂದ್ಯಾವಳಿ, ಕ್ರೀಡಾಕೂಟ ಆಯೋಜನೆಗೆ ನಿರ್ಬಂಧ ವಿಧಿಸಿದೆ.
‘ಇಬ್ಬರ ಕೊಲೆ ಹಿನ್ನೆಲೆಯಲ್ಲಿ ಮುಂಬರುವ 2023ರ ವಿಧಾನಸಭಾ ಚುನಾವಣೆ ಮುಗಿಯುವವರೆಗೂ ರಾಜಕೀಯ ಪ್ರೇರಿತ ಕ್ರಿಕೆಟ್ ಪಂದ್ಯಾವಳಿಗಳನ್ನು ನಿರ್ಬಂಧಿಸಲಾಗಿದೆ’ ಎಂದು ಬೆಂಗಳೂರು ಗ್ರಾಮಾಂತರ ಎಸ್.ಪಿ. ಮಲ್ಲಿಕಾರ್ಜುನ ಬಾಲದಂಡಿ ಭಾನುವಾರ ಆದೇಶ ಹೊರಡಿಸಿದ್ದಾರೆ.
‘ರಾಜಕೀಯ ಪ್ರೇರಿತ ಕ್ರಿಕೆಟ್ ಪಂದ್ಯಾವಳಿಗಳು ನಡೆಯದಂತೆ ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಯಾರಾದರೂ ಪಂದ್ಯಾವಳಿ ಆಯೋಜಿಸಿದರೆ, ಅಂಥವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು’ ಎಂದು ಡಿವೈಎಸ್ಪಿ, ಸಿಪಿಐ, ಪಿಎಸ್ಐಗಳಿಗೆ ಸೂಚನೆ ನೀಡಿದ್ದಾರೆ.
ಚುನಾವಣೆ ಮುಗಿಯುವವರೆಗೂ ಸರ್ಕಾರ ನಡೆಸುವ ಕ್ರೀಡೆಗಳನ್ನು ಹೊರತು ಪಡಿಸಿ ಯಾವುದೇ ಖಾಸಗಿ ವ್ಯಕ್ತಿ, ಸಂಸ್ಥೆಗಳು ಆಯೋಜನೆ ಮಾಡುವ ಯಾವುದೇ ಕ್ರೀಡೆಗಳಿಗೂ ಅವಕಾಶ ನೀಡದಂತೆ ಸೂಚಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.