ಹೊಸಕೋಟೆ: ದಾವಣಗೆರೆಯಲ್ಲಿಆಗಸ್ಟ್ 3ರಂದು ನಡೆಯಲಿರುವ ಸಿದ್ದರಾಮಯ್ಯ ಅವರ ಜನ್ಮ ದಿನಾಚರಣೆಯು ಕಾಂಗ್ರೆಸ್ ಪಕ್ಷದ ಕಾರ್ಯಕ್ರಮವಾಗಿದೆ. ಅದನ್ನು ಪಕ್ಷದ ಸಂಘಟನೆಗಾಗಿ ಆಯೋಜಿಸಲಾಗಿದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
ನಗರದಲ್ಲಿ ನಡೆದ ಕಾರ್ಯಕ್ರಮದ ಪೂರ್ವ ಸಿದ್ಧತಾ ಸಭೆಯ ನಂತರ ಅವರು ಮಾತನಾಡಿದರು.
ಕರ್ನಾಟಕ ಕಂಡ ಅತ್ಯುತ್ತಮ ಮುಖ್ಯಮಂತ್ರಿಗಳಲ್ಲಿ ಸಿದ್ದರಾಮಯ್ಯ ಕೂಡ ಒಬ್ಬರಾಗಿದ್ದಾರೆ. ಅವರ ಜನ್ಮ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ. ಅದಕ್ಕಾಗಿ ತಾಲ್ಲೂಕಿನ ಎಲ್ಲಾ ಭಾಗಗಳಿಂದ ಸಾವಿರಾರು ಜನರು ದಾವಣಗೆರೆಗೆ ತೆರಳಲಿದ್ದಾರೆ. ತಾಲ್ಲೂಕಿನಿಂದ 60ಕ್ಕೂ ಹೆಚ್ಚು ಬಸ್ಗಳ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ಸಾವಿರಾರು ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು, ಮುಖಂಡರು ತೆರಳಲಿದ್ದಾರೆ. ಇದರ ಪೂರ್ವಭಾವಿ ಸಭೆಗೆ ಕಾರ್ಯಕರ್ತರು ಉತ್ಸಾಹದಿಂದ ಬಂದಿದ್ದು, ತಾಲ್ಲೂಕಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ್ತಷ್ಟು ಬಲ ಬಂದಿದೆ ಎಂದರು.
ಕಾರ್ಯಕ್ರಮದ ಆಯೋಜನೆ ವಿಚಾರದಲ್ಲಿ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಎಲ್ಲರೂ ಒಟ್ಟಿಗೆ ಸೇರಿ ಕಾರ್ಯಕ್ರಮ ಆಯೋಜಿಸಿದ್ದೇವೆ. ಪಕ್ಷದ ಮುಖಂಡರಾದ ರಾಹುಲ್ ಗಾಂಧಿ, ಡಿ.ಕೆ. ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಎಲ್ಲಾ ಮುಖಂಡರು ಭಾಗವಹಿಸಲಿದ್ದಾರೆ ಎಂದುತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಮುನಿಶಾಮಣ್ಣ, ಮುಖಂಡರಾದ ಭೈರೇಗೌಡ, ಕೋಡಿಹಳ್ಳಿ ಸುರೇಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೃಷ್ಣಮೂರ್ತಿ, ವೈ.ಎಸ್.ಎಂ. ಮುಂಜುನಾಥ್, ಲಕ್ಷ್ಮಿನಾರಾಯಣ, ಸಿ. ಮುನಿಯಪ್ಪ, ಮಲ್ಲಸಂದ್ರ ಶೇಷಪ್ಪ, ಕೃಷ್ಣಾರೆಡ್ಡಿ, ಹುಲ್ಲೂರು ಬಚ್ಚೇಗೌಡ, ಕೆಂಚೇಗೌಡಹಾಜರಿದ್ದರು.