ತೂಬಗೆರೆ (ದೊಡ್ಡಬಳ್ಳಾಪುರ): ‘ತೂಬಗೆರೆ ಹೋಬಳಿಯಲ್ಲಿನ ಗ್ರಾಮಗಳ ರಸ್ತೆ, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯಗಳ ಅಭಿವೃದ್ಧಿಗೆ ಪ್ರಥಮ ಆದ್ಯತೆ ನೀಡಲಾಗಿದೆ’ ಎಂದು ಶಾಸಕ ನಿಸರ್ಗ ನಾರಾಯಣಸ್ವಾಮಿ ಹೇಳಿದರು.
ತಾಲ್ಲೂಕಿನ ತೂಬಗೆರೆ ಹೋಬಳಿಯ ವಿವಿಧ ಗ್ರಾಮಗಳಲ್ಲಿ ಎಸ್ಸಿ,ಎಸ್ಟಿ ಯೋಜನೆಯಡಿ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿಅವರು ಮಾತನಾಡಿದರು.
‘ದೇವನಹಳ್ಳಿ ವಿಧಾನ ಸಭಾ ಕ್ಷೇತ್ರಕ್ಕೆ ಸೇರಿರುವ ತೂಬಗೆರೆ ಹೋಬಳಿಗೆ ಅಭಿವೃದ್ಧಿ ಕೆಲಸದಲ್ಲಿ ಯಾವುದೇ ತಾರತಮ್ಯ ಇಲ್ಲದಂತೆ ಸಮಾನವಾಗಿ ನೋಡಿಕೊಳ್ಳಲಾಗಿದೆ. ಈಚೆಗೆ ತೂಬಗೆರೆ ಹೋಬಳಿಯನ್ನು ಮಂಚೇನಹಳ್ಳಿ ತಾಲ್ಲೂಕಿಗೆ ಸೇರ್ಪಡೆ ಮಾಡಲಾಗುತ್ತದೆ ಎನ್ನುವ ಮಾಹಿತಿ ಕೇವಲ ವದಂತಿ ಅಷ್ಟೆ. ಈ ಬಗ್ಗೆ ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ’ ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಎಚ್.ಅಪ್ಪಯ್ಯ, ಮುಖಂಡರಾದ ದೇವರಾಜ್, ಗೌರೀಶ್ ಇದ್ದರು.