ಸೂಲಿಬೆಲೆ: ಸಾರ್ವಜನಿಕರ ಅನುದಾನದಲ್ಲಿ ನಿರ್ಮಾಣವಾಗುವ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರುವಂತೆ ಗುತ್ತಿಗೆದಾರರು ನೋಡಿಕೊಳ್ಳಬೇಕು ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.
ಸೂಲಿಬೆಲೆ ಹೋಬಳಿಯ ಕಂಬಳೀಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇ.ಮುತ್ಸಂದ್ರ ಗ್ರಾಮದಲ್ಲಿ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ಮುತ್ಸಂದ್ರ ಗ್ರಾಮದಲ್ಲಿ ₹ 10 ಲಕ್ಷ ಅಂದಾಜು ವೆಚ್ಚದಲ್ಲಿ ಕಟ್ಟಡ ಹಾಗೂ ಕಾಲೊನಿಯಲ್ಲಿ ₹ 10 ಲಕ್ಷ ಅಂದಾಜು ವೆಚ್ಚದಲ್ಲಿ ಚರಂಡಿ ಕಾಮಗಾರಿಯನ್ನು ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಕೈಗೊಲ್ಲಲಾಗಿದೆ ಎಂದು ತಿಳಿಸಿದರು.
ಹೊಸಕೋಟೆ ತಾಲ್ಲೂಕನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವುದೇ ಮೊದಲ ಆದ್ಯತೆಯಾಗಿದೆ. ಆ ದೆಸೆಯಲ್ಲಿ ಯೋಜನೆಗಳನ್ನು ಮಾಡಲಾಗುತ್ತಿದೆ. ಕೊರೊನಾ ಸಂಕಷ್ಟದಲ್ಲಿ ಜನತೆ ಜೊತೆಗಿದ್ದೇನೆ. ಈ ಸಂದರ್ಭದಲ್ಲಿ ಸುಮಾರು 45 ಸಾವಿರ ಆಹಾರ ಕಿಟ್ ನೀಡಲಾಗಿದೆ. ಇತ್ತೀಚೆಗೆ ಮಳೆ ಹಾನಿಗೊಳಗಾದ ಕುಟುಂಬಗಳ ನೆರವಿಗೆ ಧಾವಿಸಲಾಗಿದೆ ಎಂದು ಹೇಳಿದರು.
ಸಹಕಾರ ಬ್ಯಾಂಕ್ ಅಧ್ಯಕ್ಷ ಬಿ.ವಿ.ಸತೀಶಗೌಡ, ವೈ.ಎಸ್.ಎಂ.ಮಂಜುನಾಥ್, ತಾಲ್ಲೂಕು ಪಂಚಾಯಿತಿ ಸದಸ್ಯ ನಾಗರಾಜಪ್ಪ, ಹಸಿಗಾಳ ಸೋಮಶೇಖರ್, ಮುಖಂಡರಾದ ಆನಂದಪ್ಪ, ದೇವರಾಜ್ ಇದ್ದರು.