ಆನೇಕಲ್: ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಹಲವು ಸಂಘಟನೆಗಳು ಪ್ರತಿಭಟನೆ ಹಮ್ಮಿಕೊಳ್ಳುವ ಸೂಚನೆಗಳಿದ್ದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಾರಿಗೊಳಿಸಲಾಗಿದ್ದ ನಿಷೇಧಾಜ್ಞೆಯನ್ನು ಡಿ.21 ರಾತ್ರಿ 12ರವರೆಗೆ ವಿಸ್ತರಿಸಿ ತಹಶೀಲ್ದಾರ್ ದಿನೇಶ್ ಅವರು ಆದೇಶ ಹೊರಡಿಸಿದ್ದಾರೆ.
ಸರ್ಜಾಪುರ, ಅತ್ತಿಬೆಲೆ, ಹೆಬ್ಬಗೋಡಿ, ಸೂರ್ಯನಗರ, ಜಿಗಣಿ, ಬನ್ನೇರುಘಟ್ಟ ಮತ್ತು ಆನೇಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ. ಸಾರ್ವಜನಿಕರು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಸಹಕರಿಸಬೇಕು ಎಂದು ತಹಶೀಲ್ದಾರ್ ಮನವಿ ಮಾಡಿದ್ದಾರೆ.
ಬಿಗಿ ಬಂದೋಬಸ್ತ್: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಪೊಲೀಸರು ತಾಲ್ಲೂಕಿನಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದರು. ಆನೇಕಲ್ನಲ್ಲಿ ಬೆಳಗಿನಿಂದಲೂ ಪ್ರಮುಖ ವೃತ್ತಗಳಲ್ಲಿ ಪೊಲೀಸರು ಬಂದೋಬಸ್ತ್ ಕೈಗೊಂಡಿದ್ದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಭದ್ರತೆ ಕೈಗೊಂಡಿದ್ದರು. ತಾಲ್ಲೂಕಿನ ಬನ್ನೇರುಘಟ್ಟ, ರಾಷ್ಟ್ರೀಯ ಹೆದ್ದಾರಿ 7ರ ಚಂದಾಪುರ, ಅತ್ತಿಬೆಲೆ, ಸರ್ಜಾಪುರಗಳಲ್ಲಿಯೂ ಪೊಲೀಸರು ಭದ್ರತೆ ಕೈಗೊಂಡಿದ್ದರು.
ಆನೇಕಲ್ ಪೊಲೀಸ್ ಉಪವಿಭಾಗದಲ್ಲಿ ಯಾವುದೇ ರೀತಿಯ ಪ್ರತಿಭಟನೆಗಳು ನಡೆದಿಲ್ಲ. ಶಾಂತಿಯುತವಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ 144ನೇ ಸೆಕ್ಷನ್ ಜಾರಿಗೊಳಿಸಲಾಗಿದೆ ಎಂದು ಡಿವೈಎಸ್ಪಿ ನಂಜುಂಡೇಗೌಡ ತಿಳಿಸಿದರು.