ಟಿಎಚ್ಒ ನಾಪತ್ತೆ: ಹುಡುಕಿಕೊಡಲು ಪ್ರತಿಭಟನೆ

ದೇವನಹಳ್ಳಿ: ಹೊಸಕೋಟೆ ತಾಲೂಕು ಆರೋಗ್ಯಾಧಿಕಾರಿ ಡಾ.ಮಂಜುನಾಥ್ ಅವರನ್ನು ಹುಡುಕಿಕೊಡುವಂತೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಇಲ್ಲಿನ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
ತಾಲ್ಲೂಕು ಆರೋಗ್ಯಧಿಕಾರಿ ಮಂಜುನಾಥ್ ಡಿ.9 ರಂದು ದಿನವಹಿ ಹಾಜರಾತಿ ಪುಸ್ತಕದಲ್ಲಿ ಸಹಿ ಮಾಡಿರುವ ಪತ್ರವನ್ನು ಜಿಲ್ಲಾಧಿಕಾರಿಗೆ ನೀಡಿರುತ್ತಾರೆ. ಪತ್ರ ಡಿ.11ರಂದು ಅನಧಿಕೃತವಾಗಿ ₹10ಲಕ್ಷ ಮೌಲ್ಯದ ಆಲೋಪತಿ ಔಷಧಿಗಳನ್ನು ಸುಜಾತಾ ಕ್ಲಿನಿಕ್ನಲ್ಲಿ ಸಂಗ್ರಹಿಸಿರುತ್ತಾರೆ ಎಂಬ ದೂರಿನನ್ವಯ ಅವರ ವಿರುದ್ಧ ತಕ್ಷಣ ಜಿಲ್ಲಾ ಆರೋಗ್ಯಾಧಿಕಾರಿ ಕೆ.ಮಂಜುಳಾ ಅವರಿಗೆ ಸೂಕ್ತಕ್ರಮ ಜರುಗಿಸುವಂತೆ ಅದೇಶ ನೀಡಿದ್ದರು.
ಜಿಲ್ಲಾ ಆರೋಗ್ಯಧಿಕಾರಿ ಡಾ. ಮಂಜುಳಾದೇವಿ ಸುಜಾತ ಕ್ಲಿನಿಕ್ನಲ್ಲಿದ್ದ ಅಕ್ರಮ ಔಷಧಿಗಳನ್ನು ವಶಕ್ಕೆ ಪಡೆದು ಕ್ಲಿನಿಕ್ ಮುಚ್ಚುವಂತೆ ಸೂಚಿಸಿರುತ್ತಾರೆ. ಈ ಘಟನೆ ನಡೆದ ಹಿನ್ನಲೆಯಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮಂಜುನಾಥ್ ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ ಎಂದು ದೂರಿದರು.
ಆಶಾ ಕಾರ್ಯಕರ್ತೆಯರಾದ ಲಕ್ಷ್ಮಮ್ಮ, ಅಂಬಿಕಾ, ಮರಿಯಂ ಮಾತನಾಡಿ, ಡಾ.ಮಂಜುನಾಥ್ ಒಬ್ಬ ದಕ್ಷ ಅಧಿಕಾರಿ. ಅವರು ನಾಪತ್ತೆಯಾಗಿದ್ದಾರೆ. ಅವರು ಎಲ್ಲಿದ್ದಾರೆ, ಹೇಗಿದ್ದಾರೆ ಮತ್ತು ಏನಾಗಿದೆ ಎಂಬುದು ತಿಳಿಯುತ್ತಿಲ್ಲ ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಮಾತನಾಡಿ, ತಾಲ್ಲೂಕು ಆರೋಗ್ಯಾಧಿಕಾರಿ ಬಗ್ಗೆ ಪೊಲೀಸ್ ಇಲಾಖೆಯಿಂದ ಮಾಹಿತಿ ಪಡೆಯಲಾಗುತ್ತಿದೆ. ವೈಯಕ್ತಿಕ ಕಾರಣಕ್ಕಾಗಿ ರಜೆ ಹಾಕಿದ್ದಾರೆ ಎಂಬುದನ್ನು ಪರಿಶೀಲಿಸಲಾಗುತ್ತಿದೆ ಎಂದರು.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.