ದೇವನಹಳ್ಳಿ: ಕೇಂದ್ರ ಮತ್ತು ರಾಜ್ಯ ಸರ್ಕಾರದ ತಿದ್ದುಪಡಿ ಮಸೂದೆಗಳ ವಿರುದ್ಧ ಪ್ರಗತಿಪರ ಸಂಘಟನೆಗಳು ಸೆ.25 ರಂದು ಬಂದ್ ಮತ್ತು ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಲು ನಿರ್ಧರಿಸಿವೆ.
ಪ್ರವಾಸಿ ಮಂದಿರದಲ್ಲಿ ಗುರುವಾರ ನಡೆದ ರೈತಸಂಘ ಹಾಗೂ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಪೂರ್ವಭಾವಿ ಸಭೆಯ ಬಳಿಕ ನಾಗರಿಕ ಹಿತರಕ್ಷಣಾ ವೇದಿಕೆ ತಾಲ್ಲೂಕು ಅಧ್ಯಕ್ಷ ಬಿ.ಕೆ.ಶಿವಪ್ಪ ಈ ವಿಷಯ ತಿಳಿಸಿದರು.
ದಲಿತ, ಕಾರ್ಮಿಕ ಮತ್ತು ರೈತರಿಗೆ ಮರಣ ಶಾಸನವಾಗಿರುವ ಎಪಿಎಂಸಿ, ಭೂ ಸುಧಾರಣಾ ಮತ್ತು ಕಾರ್ಮಿಕ ತಿದ್ದುಪಡಿ ಮಸೂದೆಗಳನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿ ಈ ಬಂದ್ನಡೆಸಲಾಗುವುದು.ಸೆ. 28ರಂದು ನಡೆಯಲಿರುವ ‘ಕರ್ನಾಟಕ ಬಂದ್’ಗೂ 20ಕ್ಕೂ ಹೆಚ್ಚು ಪ್ರಗತಿಪರ ಸಂಘಟನೆಗಳು ಬೆಂಬಲಿಸಿವೆ ಎಂದು ಅವರು ತಿಳಿಸಿದರು.
ಬಂಡವಾಳಶಾಹಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಸರ್ಕಾರ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಮಾಡಲು ಹೊರಟಿದೆ ಎಂದು ರೈತ ಸಂಘ (ಪ್ರೊ. ನಂಜುಂಡಸ್ವಾಮಿ ಸ್ಥಾಪಿತ) ಜಿಲ್ಲಾ ಘಟಕ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಆರೋಪಿಸಿದರು.
ಮಾನವ ಹಕ್ಕುಗಳ ಜಾಗೃತಿ ಸಮಿತಿ ತಾಲ್ಲೂಕು ಘಟಕ ಅಧ್ಯಕ್ಷ ನಾರಾಯಣಸ್ವಾಮಿ, ರೈತಸಂಘ ತಾಲ್ಲೂಕು ಅಧ್ಯಕ್ಷ ಮುನಿಶ್ಯಾಮಪ್ಪ, ಹಸಿರುಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಉಮೇಶ್, ಪ್ರಧಾನ ಕಾರ್ಯದರ್ಶಿ ಜಯಶಂಕರ್, ಕರವೇ ರಾಜ್ಯ ಘಟಕ ಗೌರವಾಧ್ಯಕ್ಷ ಚಂದ್ರಶೇಖರ್, ಜನಶಕ್ತಿ ವೇದಿಕೆ ಪದಾಧಿಕಾರಿಗಳು ಭಾಗವಹಿಸಿದ್ದರು.