ಆನೇಕಲ್: ತಾಲ್ಲೂಕಿನ ಚಂದಾಪುರ-ದೊಮ್ಮಸಂದ್ರ ರಸ್ತೆಯು ಹದಗೆಟ್ಟಿದ್ದು ರಸ್ತೆ ಅಭಿವೃದ್ಧಿಗೆ ಒತ್ತಾಯಿಸಿ ಗ್ರಾಮಸ್ಥರು ಗುರುವಾರ ಪ್ರತಿಭಟನೆ ನಡೆಸಿದರು.
ಚಂದಾಪುರ-ದೊಮ್ಮಸಂದ್ರ ರಸ್ತೆಯು ಹಲವು ವರ್ಷಗಳಿಂದ ಹದಗೆಟ್ಟಿದ್ದು ಈ ರಸ್ತೆಯಲ್ಲಿ ಸಂಚರಿಸಲು ಸಾರ್ವಜನಿಕರು ಪರದಾಡಬೇಕಾಗುತ್ತದೆ. ರಸ್ತೆ ಅಭಿವೃದ್ಧಿಗೆ ಟೆಂಡರ್ ಆಗಿದ್ದರೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ರಸ್ತೆ ಅಭಿವೃದ್ಧಿಗೆ ಮುಂದಾಗುತ್ತಿಲ್ಲ ಎಂದು ದೂರಿದರು.
ಈ ರಸ್ತೆಯು ಗುಂಡಿಗಳಿಂದ ಕೂಡಿದ್ದು ಪ್ರತಿನಿತ್ಯ ದ್ವಿಚಕ್ರ ವಾಹನಗಳು ಪರದಾಡಬೇಕಾದ ಪರಿಸ್ಥಿತಿಯಿದೆ. ಹರಸಾಹಸ ಮಾಡಿ ಈ ರಸ್ತೆಯಲ್ಲಿ ಸಂಚರಿಸಬೇಕಾಗುತ್ತದೆ. ಕಳೆದ ಹಲವು ವರ್ಷಗಳಿಂದ ರಸ್ತೆಯನ್ನು ಅಭಿವೃದ್ಧಿ ಮಾಡಿಲ್ಲ ಎಂದು ಆರೋಪಿಸಿದರು.
ಚಂದಾಪುರ ಪುರಸಭಾ ಸದಸ್ಯ ವೆಂಕಟಸ್ವಾಮಿ ಮಾತನಾಡಿ, ಚಂದಾಪುರ-ದೊಮ್ಮಸಂದ್ರ ರಸ್ತೆಯು ಅತ್ಯಂತ ಹದಗೆಟ್ಟಿದ್ದು ಪ್ರತಿನಿತ್ಯ ಸಾರ್ವಜನಿಕರು ಈ ರಸ್ತೆಯಲ್ಲಿ ಸಂಚರಿಸಲು ಪರದಾಡಬೇಕಾಗುತ್ತದೆ. ದ್ವಿಚಕ್ರವಾಹನಗಳು ಗುಂಡಿಗಳನ್ನು ತಪ್ಪಿಸುವಾಗ ಹಲವು ಬಾರಿ ಅಪಘಾತಗಳು ಸಂಭವಿಸಿವೆ ಎಂದರು.
ಪ್ರತಿದಿನ ಆಗುವ ಸಮಸ್ಯೆಯಿಂದ ಬೇಸತ್ತಿರುವ ಸಾರ್ವಜನಿಕರು ರಸ್ತೆ ತಡೆಯ ಮೊರೆ ಹೋಗಿದ್ದಾರೆ. ಲೋಕೋಪಯೋಗಿ ಇಲಾಖೆಯವರು ತುರ್ತು ಕ್ರಮ ಕೈಗೊಂಡು ಈ ರಸ್ತೆಯನ್ನು ಅಭಿವೃದ್ಧಿ ಪಡಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ತಿಳಿಸಿದರು.
ಪುರಸಭಾ ಸದಸ್ಯ ಕೃಷ್ಣಾರೆಡ್ಡಿ, ಮುಖಂಡರಾದ ಮುನಿಸ್ವಾಮಿರೆಡ್ಡಿ, ರಾಜಪ್ಪ, ಶಶಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.