ದೊಡ್ಡಬಳ್ಳಾಪುರ: ಮಹಿಳೆಯರು ಹಾಗೂ ವಿದ್ಯಾರ್ಥಿನಿಯರಿಗೆ ಸುರಕ್ಷಿತೆ ಇಲ್ಲದಾಗಿದೆ. ಈ ಕುರಿತಂತೆ ಡಿ.14 ರಂದು ನಗರದಲ್ಲಿ ಮಹಿಳಾ ಮತ್ತು ಮಕ್ಕಳ ಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಜಾಥಾ ನಡೆಸಿ ಮನವಿ ಸಲ್ಲಿಸಲಾಗುವುದು. ಈ ಮನವಿ ಪತ್ರವನ್ನು ಖುದ್ದಾಗಿ ಜಿಲ್ಲಾಧಿಕಾರಿಗಳೇ ಬಂದು ಸ್ವೀಕರಿಸಬೇಕು ಎಂದು ಒಕ್ಕೂಟದ ವತಿಯಿಂದ ಸೋಮವಾರ ಜಿಲ್ಲಾಧಿಕಾರಿ ಕರೀಗೌಡ ಅವರಿಗೆ ಮನವಿ ಸಲ್ಲಿಸಲಾಯಿತು.
ತಾಲ್ಲೂಕಿನಲ್ಲಿ ಇತ್ತೀಚೆಗೆ ಹೆಣ್ಣು ಮಕ್ಕಳು ಕಾಣೆಯಾಗುತ್ತಿರುವ ಹಾಗೂ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇದಲ್ಲದೆ ಪ್ರೀತಿಸಲು ನಿರಾಕರಿಸಿದ 10ನೇ ತರಗತಿಯ ವಿದ್ಯಾರ್ಥಿನಿ ಶಾಲೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ದಾರಿಯಲ್ಲಿಯೇ ಅಡ್ಡಗಟ್ಟಿ ಕೊಚ್ಚಿ ಕೊಲೆ ಮಾಡಲಾಗಿದೆ. ಈ ಎಲ್ಲ ಪ್ರಕರಣಗಳಿಂದ ಮಹಿಳೆಯರು ಹಾಗೂ ಹೆಣ್ಣು ಮಕ್ಕಳಲ್ಲಿ ಅಸುರಕ್ಷಿತೆಯ ಭಾವನೆ ಮೂಡಿದೆ. ಈ ಕುರಿತಂತೆ ನಡೆಯುತ್ತಿರುವ ಜಾಥಾ ಸಂದರ್ಭದಲ್ಲಿ ಹಾಜರಿದ್ದು ಮನವಿ ಪತ್ರವನ್ನು ಸ್ವೀಕರಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಹಿಳಾ ಒಕ್ಕೂಟದ ಪರವಾಗಿ ಮನವಿ ಸಲ್ಲಿಸಲಾಯಿತು.