ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ ಆಂಗ್ಲ ಶಾಲೆಗೆ ಶಿಕ್ಷಕರ ಕೊರತೆ

ಮಕ್ಕಳ ಕಲಿಕೆಗೆ ಹಿನ್ನಡೆ: ತ್ವರಿತವಾಗಿ ಬೋಧಕರ ನೇಮಕಕ್ಕೆ ಪೋಷಕರ ಆಗ್ರಹ
Last Updated 10 ಜುಲೈ 2022, 6:00 IST
ಅಕ್ಷರ ಗಾತ್ರ

ವಿಜಯಪುರ: ಸರ್ಕಾರಿ ಶಾಲೆಗಳಲ್ಲಿ ಪ್ರಾಥಮಿಕ ಹಂತದಿಂದಲೇ ಮಕ್ಕಳಿಗೆ ಆಂಗ್ಲ ಮಾಧ್ಯಮ ಶಿಕ್ಷಣ ಆರಂಭಿಸಿರುವ ಸರ್ಕಾರ ಪ್ರತ್ಯೇಕವಾಗಿ ಶಿಕ್ಷಕರನ್ನು ಮಾತ್ರ ನೇಮಿಸಿಕೊಂಡಿಲ್ಲ. ಇದರಿಂದ ಮಕ್ಕಳ ಕಲಿಕೆಗೆ ತೊಂದರೆಯಾಗಿದೆ.

ಕೆಲವು ಶಾಲೆಗಳನ್ನು ಆಂಗ್ಲ ಮಾಧ್ಯಮಕ್ಕೆ ಆಯ್ಕೆ ಮಾಡಿದೆ. ಈ ಶಾಲೆಗಳಲ್ಲಿ ಕನ್ನಡ ಮಾಧ್ಯಮ ಹಾಗೂ ಆಂಗ್ಲ ಮಾಧ್ಯಮದ ಮಕ್ಕಳಿಗೆ ಕಲಿಸಲು ಪ್ರತ್ಯೇಕ ಶಿಕ್ಷಕರು ಇಲ್ಲ. ಇದರಿಂದ ಇರುವ ಶಿಕ್ಷಕರ ಮೇಲೆ ಹೆಚ್ಚಿನ ಹೊರೆ ಬಿದ್ದಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆಯು ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕನ್ನಡ ಮಾಧ್ಯಮದ ಜೊತೆಗೆ ಹೆಚ್ಚುವರಿಯಾಗಿ ಆಂಗ್ಲ ಮಾಧ್ಯಮ ಆರಂಭಿಸಲು ಸೂಚನೆ ನೀಡಿದೆ. ಈ ಸೂಚನೆಯು ಶಿಕ್ಷಕರ ಮೇಲೆ ಒತ್ತಡ ಹೆಚ್ಚಿಸಿದೆ. ಕನ್ನಡ ಮಾಧ್ಯಮದಲ್ಲಿ ಪಾಠ ಮಾಡುವ ಶಿಕ್ಷಕರೇ ಆಂಗ್ಲ ಮಾಧ್ಯಮದಲ್ಲೂ ಬೋಧನೆ ಮಾಡಬೇಕಾಗಿದೆ. ಇದರಿಂದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಲು ಹೇಗೆ ಸಾಧ್ಯ ಎಂಬುದು ಪೋಷಕರ ಪ್ರಶ್ನೆ.

‘ಸರ್ಕಾರ ಹೆಸರಿಗೆ ಮಾತ್ರ ಆಂಗ್ಲ ಮಾಧ್ಯಮದಲ್ಲಿ ಮಕ್ಕಳಿಗೆ ಪಾಠ ಮಾಡುತ್ತೇವೆ ಎಂದು ಹೇಳುತ್ತಿದೆ. ಪ್ರತ್ಯೇಕವಾಗಿ ಶಿಕ್ಷಕರನ್ನು ನೇಮಕ ಮಾಡಬೇಕು. ಮಕ್ಕಳ ಕಲಿಕೆಗೆ ಪೂರಕವಾದ ಸಂಪನ್ಮೂಲ ಒದಗಿಸಿಕೊಡಬೇಕಿದೆ’ ಎಂದು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸುಧಾಕರ್ ಸರ್ಕಾರಕ್ಕೆ ಒತ್ತಾಯಿಸಿದರು.

ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮದಲ್ಲಿ ತರಗತಿಗಳು ಆರಂಭ ವಾಗಿವೆ ಎಂದು ಬಹಳಷ್ಟು ಬಡ ಕುಟುಂ ಬದ ಪೋಷಕರು ಮಕ್ಕಳನ್ನು ಖಾಸಗಿ ಶಾಲೆಗಳಿಂದ ವಾಪಸ್‌ ಕರೆದುಕೊಂಡು ಬಂದು ಸರ್ಕಾರಿ ಶಾಲೆಗಳಿಗೆ ದಾಖಲು ಮಾಡಿಸಿದ್ದಾರೆ. ಇದರಿಂದ ಶಾಲೆಗಳಲ್ಲಿ ದಾಖಲಾತಿಯೂ ಹೆಚ್ಚಾಗಿದೆ.

ಆದರೆ, ಆಂಗ್ಲ ಮಾಧ್ಯಮ ಆರಂಭಿಸಿರುವ ಶಾಲೆಗಳಲ್ಲಿ ಇರುವ ಶಿಕ್ಷಕರೇ ಎರಡೂ ಮಾಧ್ಯಮಗಳ ಮಕ್ಕಳಿಗೆ ಪಾಠ ಮಾಡುತ್ತಿದ್ದಾರೆ. ಇದರಿಂದ ಮಕ್ಕಳ ಆಂಗ್ಲ ಮಾಧ್ಯಮದ ಕಲಿಕೆಗೆ ಹಿನ್ನಡೆಯಾಗುತ್ತಿದೆ. ಶಿಕ್ಷಕರು ಸರ್ಕಾರದ ನಿರ್ದೇಶನ ಮೀರಲು ಸಾಧ್ಯವಾಗದೆ ಒತ್ತಡದಲ್ಲಿ ಕೆಲಸ ಮಾಡುವಂತಾಗಿದೆ.

ಸರ್ಕಾರ ತರಾತುರಿಯಲ್ಲಿ ಆಂಗ್ಲ ಮಾಧ್ಯಮ ಶಾಲೆಗಳನ್ನು ಆರಂಭಿಸಿದೆ. ಇರುವ ಶಿಕ್ಷಕರಲ್ಲಿಯೇ ಹೊಂದಾಣಿಕೆ ಮಾಡಿಕೊಂಡು ಪಾಠ ಮಾಡುವುದಾಗಿ ಆಂಗ್ಲ ಮಾಧ್ಯಮ ಆರಂಭ ಮಾಡಿದ್ದ ಶಿಕ್ಷಕರು ಈಗ ಹೆಣಗಾಡುವಂತಾಗಿದೆ. ಸರ್ಕಾರ ಕೂಡ ತ್ವರಿತವಾಗಿ ಹೆಚ್ಚುವರಿ ಸಿಬ್ಬಂದಿಯನ್ನು ನೇಮಕ ಮಾಡುವುದಾಗಿ ಹೇಳಿತ್ತು. ಆದರೆ, ಇದುವರೆಗೂ ಶಿಕ್ಷಕರನ್ನು ನೇಮಕ ಮಾಡಿಲ್ಲ. ಇದು ಮಕ್ಕಳ ಕಲಿಕೆಗೆ ತೊಂದರೆಯಾಗಿದೆ.

‘ಯಾವ ಶಾಲೆಗಳು ಆಂಗ್ಲ ಮಾಧ್ಯಮದಲ್ಲಿ ಕಲಿಸಲು ಒಪ್ಪಿಗೆ ನೀಡಿದ್ದವೋ ಅಂತಹ ಶಾಲೆಗಳನ್ನು ಮಾತ್ರ ಆಯ್ಕೆ ಮಾಡಿ ಶಾಲೆ ಆರಂಭಿಸಲಾಗಿದೆ. ಶಿಕ್ಷಕರ ನೇಮಕಾತಿಗೆ ಸಿಇಟಿ ಪರೀಕ್ಷೆ ನಡೆದಿದೆ. ಉತ್ತರಪತ್ರಿಕೆಗಳ ಮೌಲ್ಯಮಾಪನ ನಡೆಯುತ್ತಿದ್ದು, ನೇಮಕಾತಿ ಪ್ರಕ್ರಿಯೆಯನ್ನು ಸರ್ಕಾರ ಮಾಡಲಿದೆ’ ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಶ್ರೀಕಂಠಯ್ಯ ತಿಳಿಸಿದರು.

‘ಶಾಲೆಗಳಲ್ಲಿ ಕನ್ನಡ ಮಾಧ್ಯಮದೊಂದಿಗೆ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಬೋಧನೆಗೆ ಶಿಕ್ಷಕರಿಗೆ ತುಂಬಾ ಕಷ್ಟವಾಗುತ್ತಿದೆ. ಅತಿಥಿ ಶಿಕ್ಷಕರನ್ನು ಬಳಕೆ ಮಾಡಿಕೊಂಡು ಆಂಗ್ಲ ಮಾಧ್ಯಮವನ್ನು ಮಾಡುತ್ತಿದ್ದೇವೆ. ಸರ್ಕಾರ ಶೀಘ್ರವೇ ಶಿಕ್ಷಕರನ್ನು ನೇಮಕ ಮಾಡಿದರೆ ಉತ್ತಮ’ ಎಂದುಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷಆದರ್ಶ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT