ಹೊಸಕೋಟೆ: ತಲೆಮರೆಸಿಕೊಂಡಿದ್ದ ಭ್ರೂಣ ಹತ್ಯೆ ಪ್ರಕರಣದ ಪ್ರಮುಖ ಆರೋಪಿ, ಎಸ್ಪಿಜಿ ಆಸ್ಪತ್ರೆಯ ಮಾಲೀಕ ಡಾ.ಶ್ರೀನಿವಾಸ್ ಅವರನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಹೊಸಕೋಟೆ–ಬೆಂಗಳೂರು ರಸ್ತೆಯಲ್ಲಿ ಕಾರಿನಲ್ಲಿ ಹೊರಟಿದ್ದ ಡಾ.ಶ್ರೀನಿವಾಸ್ ಅವರನ್ನು ತಿರುಮಲಶೆಟ್ಟಿಹಳ್ಳಿ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಹೆಚ್ಚಿನ ವಿಚಾರಣೆಗೆ 12 ದಿನ ಪೊಲೀಸ್ ವಶಕ್ಕೆ ಪಡೆದಿದ್ದಾರೆ.
ಕಳೆದ ಬುಧವಾರ ಜಿಲ್ಲಾ ಆರೋಗ್ಯಾಧಿಕಾರಿ ನೇತೃತ್ವದ ಅಧಿಕಾರಿಗಳ ತಂಡ ತಿರುಮಲಶೆಟ್ಟಿಹಳ್ಳಿ ಕ್ರಾಸ್ನಲ್ಲಿರುವ ಎಸ್ಪಿಜಿ ಆಸ್ಪತ್ರೆಯ ಮೇಲೆ ದಾಳಿ ನಡೆಸಿತ್ತು. ಈ ವೇಳೆ ಸುಮಾರು ನಾಲ್ಕೈದು ತಿಂಗಳ ಹೆಣ್ಣು ಮಗುವಿನ ಭ್ರೂಣ ಹತ್ಯೆ ಮಾಡಿರುವುದನ್ನು ಪತ್ತೆ ಮಾಡಿತ್ತು.
ಅಂದಿನಿಂದ ಆಸ್ಪತ್ರೆಯ ಮಾಲಿಕ ಡಾ.ಶ್ರೀನಿವಾಸ್ ತಲೆಮರೆಸಿಕೊಂಡಿದ್ದರು. ಶ್ರೀನಿವಾಸ್ ಸೇರಿದಂತೆ ಐವರ ವಿರುದ್ಧ ತಿರುಮಲಶೆಟ್ಟಿಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಪ್ರಕರಣದಲ್ಲಿ ಈಗಾಗಲೇ ನಾಲ್ವರನ್ನು ಬಂಧಿಸಿ, ನ್ಯಾಯಂಗ ಬಂಧನಕ್ಕೆ ಒಪ್ಪಿಸಲಾಗಿದೆ.