ಸೂಲಿಬೆಲೆ: ಪಟ್ಟಣದಲ್ಲಿ ಉದ್ರಿಕ್ತ ಯುವಕರ ಗುಂಪೊಂದು ಬಿಎಂಟಿಸಿ ಬಸ್ಸಿನ ಮೇಲೆ ಕಲ್ಲು ತೂರಾಟ ನಡೆಸಿ, ನಿರ್ವಾಹಕನನ್ನು ಥಳಿಸಿರುವ ಘಟನೆ ಶನಿವಾರ ನಡೆದಿದೆ. ಈ ಸಂಬಂಧ ನಾಲ್ವರು ಯುವಕರನ್ನು ಬಂಧಿಸಲಾಗಿದೆ ಎಂದು ಡಿವೈಎಸ್ಪಿ ಎನ್.ಬಿ ಸಕ್ರಿ ತಿಳಿಸಿದರು.
ಹೊಸಕೋಟೆ ಕಡೆಯಿಂದ ದೊಡ್ಡಬಳ್ಳಾಪುರಕ್ಕೆ ಹೊರಟಿದ್ದ ಬಸ್ಸಿನಲ್ಲಿ ವೃದ್ಧರೊಬ್ಬರು ಮಹಿಳಾ ಮೀಸಲು ಸೀಟಿನಲ್ಲಿ ಕುಳಿತಿದ್ದರು. ಈ ವಿಷಯವಾಗಿ ನಿರ್ವಾಹಕ ಮತ್ತು ವ್ಯಕ್ತಿ ನಡುವೆ ವಾಗ್ವಾದ ನಡೆದಿದೆ. ಈ ವಿಷಯವಾಗಿ ವೃದ್ಧ ವ್ಯಕ್ತಿಯನ್ನು ನಿರ್ವಾಹಕ ಥಳಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಉದ್ರಿಕ್ತ ಯುವಕರ ಗುಂಪು ಬಸ್ಸಿನ ಗಾಜುಗಳನ್ನು ಪುಡಿಪುಡಿ ಮಾಡಿ ಆಕ್ರೋಶ ವ್ಯಕ್ತಪಡಿಸಿದೆ.
ಈ ಸಂಬಂಧ ನಿರ್ವಾಹಕ ಬಸವರಾಜು ಸೂಲಿಬೆಲೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈಗಾಗಲೇ ನಾಲ್ವರು ಯುವಕರನ್ನು ಬಂಧಿಸಲಾಗಿದ್ದು ಇನ್ನು 20ರಿಂದ 25 ಮಂದಿಯನ್ನು ಬಂಧಿಸಬೇಕಾಗಿದ್ದು ಸರ್ಕಲ್ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ಪಟ್ಟಣದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಜೀತ್ ಭೇಟಿ ನೀಡಿ ಪರಿಶೀಲಿಸಿದರು.