ದೇವನಹಳ್ಳಿ:ತಾಲ್ಲೂಕಿನ ವಿಜಯಪುರದಲ್ಲಿ ಪರಿಶಿಷ್ಟ ಜಾತಿಯ ವಿದ್ಯಾರ್ಥಿ ಮೇಲೆ ಹಲ್ಲೆ ನಡೆದು ಜಾತಿ ನಿಂದನೆ ಪ್ರಕರಣ ದಾಖಲಾಗಿದ್ದರೂ ಶಾಸಕ ನಿಸರ್ಗ ನಾರಾಯಣಸ್ಚಾಮಿ ಸೌಜನ್ಯಕ್ಕಾದರೂ ವಿದ್ಯಾರ್ಥಿ ಹಾಗೂ ಅವರ ಕುಟುಂಬದವರ ಯೋಗಕ್ಷೇಮ ವಿಚಾರಿಸಿಲ್ಲ ಎಂದು ಬಿಎಸ್ಪಿ ರಾಜ್ಯ ಘಟಕದ ಸಂಯೋಜಕ ಮಾರಸಂದ್ರ ಮುನಿಯಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಶನಿವಾರ ಮಾತನಾಡಿದ ಅವರು, ದೇವನಹಳ್ಳಿ ಮೀಸಲು ವಿಧಾನಸಭಾ ಕ್ಷೇತ್ರವಾಗಿದೆ. ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದಲ್ಲಿದ್ದರೂ ಇಂತಹ ಘಟನೆಗಳು ಮರುಕಳಿಸುತ್ತಿರುವುದು ದುರಂತ ಎಂದು ಟೀಕಿಸಿದರು.
ಶಾಸಕರಿಗೆ ದಲಿತರ ಬಗ್ಗೆ ಕಾಳಜಿಯಿಲ್ಲ. ಕೇವಲ ಮತ ಬ್ಯಾಂಕಿಗಾಗಿ ಓಲೈಕೆ ರಾಜಕಾರಣ ಮಾಡಿಕೊಂಡಿದ್ದಾರೆ. ಶಾಸಕರಾದವರು ಇಂತಹ ಘಟನೆಗಳು ನಡೆದಾಗ ತಕ್ಷಣ ದೌರ್ಜನ್ಯಕ್ಕೆ ಒಳಗಾಗಿರುವವರ ಬಳಿಗೆ ಹೋಗಿ ಅವರಿಗೆ ಧೈರ್ಯ ತುಂಬಿಸುವಂತಹ ಕೆಲಸ ಮಾಡಬೇಕು ಎಂದರು.
ವಿದ್ಯಾರ್ಥಿಯು 15 ದಿನಗಳ ಕಾಲ ಆಸ್ಪತ್ರೆಯಲ್ಲಿ ದಾಖಲಾಗಿದ್ದರೂ ಮಾತನಾಡಿಸಿಲ್ಲ. ದೌರ್ಜನ್ಯಕ್ಕೆ ಒಳಗಾಗಿರುವವರು ಯಾವುದೇ ಸಮುದಾಯಕ್ಕೆ ಸೇರಿದ್ದರೂ ಅವರ ಯೋಗಕ್ಷೇಮ ವಿಚಾರಿಸಬೇಕು ಎಂದರು.
ಕಾನೂನು ಮತ್ತು ಸುವ್ಯವಸ್ಥೆ ಹದಗೆಡದಂತೆ ನೋಡಿಕೊಳ್ಳುವಂತೆ ಪೊಲೀಸರಿಗೆ ಸೂಚಿಸಬೇಕು. ಆದರೆ, ಇಂತಹ ಯಾವುದೇ ಕೆಲಸ ಮಾಡಿಲ್ಲ. ದಲಿತರ ಪರವಾಗಿ ಹೋದರೆ ಇತರೇ ಸಮುದಾಯಗಳು ನಮ್ಮಿಂದ ದೂರವಾಗುತ್ತಾರೆ ಎನ್ನುವ ಭಯ ಅವರಿಗಿದೆ ಎಂದು ದೂರಿದರು.