ವಿಜಯಪುರ: ಶಾಲೆಯಿಂದ ಹೊರಗುಳಿದ ಮಕ್ಕಳ ಮನವೊಲಿಸಿ ಪುನರ್ ಸೇರ್ಪಡೆ ಕಾರ್ಯಕ್ರಮ ಮಾಡಲಾಗುತ್ತಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಕ್ಕಳ ಸಹಾಯವಾಣಿ 1098 ಸದಸ್ಯ ಮುರಳಿ ಹೇಳಿದರು.
ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ 9ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬರು ಶಾಲೆ ಬಿಟ್ಟು ಮಾರಾಟ ಪ್ರತಿನಿಧಿ (ಸೇಲ್ಸ್) ಕೆಲಸಕ್ಕೆ ಹೋಗುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಆಧರಿಸಿ ವಿದ್ಯಾರ್ಥಿನಿ ಪೋಷಕರನ್ನು ಭೇಟಿ ಮಾಡಿ, ಅವರ ಮನವೊಲಿಸಿ ಪುನಃ ಶಾಲೆಗೆ ದಾಖಲು ಮಾಡಿಕೊಳ್ಳಲಾಗಿದೆ. ಯಾವುದೇ ಮಗು ಶಾಲೆಯಿಂದ ಹೊರಗುಳಿದರೂ ನೇರವಾಗಿ ಹೆಲ್ಪ್ ಲೈನ್ ಸಂಖ್ಯೆಗೆ ಮಾಹಿತಿ ನೀಡಬಹುದು ಎಂದು ತಿಳಿಸಿದರು.
ಉಪಪ್ರಾಂಶುಪಾಲ ಪಿ.ವೆಂಕಟೇಶ್ ಮಾತನಾಡಿ, 14ವರ್ಷದೊಳಗಿನ ಯಾವುದೇ ಮಗು ಕಲಿಕೆಯಿಂದ ಹೊರಗುಳಿಯಬಾರದು. ಕಡ್ಡಾಯವಾಗಿ ಶಿಕ್ಷಣ ನೀಡಬೇಕು. ಮಕ್ಕಳ ಸಹಾಯವಾಣಿ ಸಂಚಾಲಕ ಹಾಗೂ ಅಂಗನವಾಡಿ ಕಾರ್ಯಕರ್ತೆ ವಿದ್ಯಾರ್ಥಿನಿ ಪೋಷಕರ ಮನವೊಲಿಸಿ ಪುನಃ ಶಾಲೆಗೆ ವಾಪಸ್ ಕರೆದುಕೊಂಡು ಬಂದಿದ್ದಾರೆ ಎಂದರು.
ಸರ್ಕಾರದಿಂದ ಉಚಿತ ಸಮವಸ್ತ್ರ, ಪಠ್ಯಪುಸ್ತಕ, ಸೈಕಲ್ ಸೇರಿದಂತೆ ಎಲ್ಲ ಸೌಲಭ್ಯ ನೀಡಲಾಗುತ್ತಿದ್ದು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಹಿರಿಯ ಶಿಕ್ಷಕ ಪಿ.ಎಂ.ಕೊಟ್ರೇಶ್, ವಿದ್ಯಾರ್ಥಿನಿ ತಾಯಿ ವೆಂಕಟೇಶಮ್ಮ, ಅಂಗನವಾಡಿ ಕಾರ್ಯಕರ್ತೆ ಲೀಲಾವತಿ, ದೈಹಿಕ ಶಿಕ್ಷಣ ಶಿಕ್ಷಕ ರಾಮಾಂಜು ಇದ್ದರು.