ದೇವನಹಳ್ಳಿ: ಮಹಿಳೆಯರು ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಸಬಲರಾದರೆ ಮಾತ್ರ ಅಭಿವೃದ್ಧಿ ಸಾಧ್ಯ ಎಂದು ತಹಶೀಲ್ದಾರ್ ಶಿವರಾಜ್ ತಿಳಿಸಿದರು.
ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಹೆಣ್ಣಿನಿಂದ ಜಗತ್ತಿನ ಅಸ್ತಿತ್ವ ಉಳಿಯಲು ಸಾಧ್ಯ. ಹೆಣ್ಣು ತಾಯಿಯಾಗಿ, ಹೆಂಡತಿಯಾಗಿ, ಮಗಳಾಗಿ ಪ್ರತಿಯೊಬ್ಬರ ಬಾಳಿನಲ್ಲಿ ಪ್ರಮುಖ ಪಾತ್ರವಹಿಸುತ್ತಾಳೆ. ಸಾವಿತ್ರಿ ಬಾಯಿ ಫುಲೆಗೆ ದೇಶದ ಮೊದಲ ಶಿಕ್ಷಕಿಯಾದ ಹೆಗ್ಗಳಿಕೆ ಸಲ್ಲುತ್ತದೆ ಎಂದರು.
ಹೆಣ್ಣುಮಕ್ಕಳಿಗೆ ಆಸ್ತಿಪಾಸ್ತಿ ಮಾಡುವ ಬದಲು ಅವರಿಗೆ ಶಿಕ್ಷಣ ನೀಡಿ ಆಸ್ತಿಯನ್ನಾಗಿಸಬೇಕು. ತಾಲ್ಲೂಕು ಕಚೇರಿಯಲ್ಲಿ ಮಹಿಳಾ ಸಿಬ್ಬಂದಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.
ಗ್ರೇಡ್ 2 ತಹಶೀಲ್ದಾರ್ ಉಷಾ ಮಾತನಾಡಿ, ಮಹಿಳಾ ಪದಾಧಿಕಾರಿಗಳು ವ್ಯಕ್ತಿ ವಿಕಸನ ತರಬೇತಿ ಪಡೆಯಬೇಕು. ಮಹಿಳೆಯರು ಎಲ್ಲಾ ರಂಗಗಳಲ್ಲೂ ಪುರುಷರಿಗೆ ಸಮಾನವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದರು.
ಗಂಡು-ಹೆಣ್ಣು ಎಂಬ ತಾರತಮ್ಯ ಇಲ್ಲದೆ ಸಮಾಜದ ಮುಖ್ಯವಾಹಿನಿಗೆ ಬರಬೇಕು. ಮಹಿಳೆ ಪ್ರಗತಿಯಾದಾಗ ದೇಶದ ಪ್ರಗತಿ ಸಾಧ್ಯ. ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆ ಸಾಧನೆ ಮಾಡುತ್ತಿದ್ದಾಳೆ. ಏನೇ ಕಷ್ಟ ಬಂದರೂ ಎದುರಿಸುವ ಶಕ್ತಿ ಹೊಂದಿರುತ್ತಾರೆ. ಹೆಣ್ಣು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು ಎಂದು ಸಲಹೆ ನೀಡಿದರು.
ಉಪ ತಹಶೀಲ್ದಾರ್ ಚೈತ್ರ, ಶಿರಸ್ತೇದಾರ್ ಭರತ್, ಶಶಿಕಲಾ, ಕಚೇರಿಯ ಸಿಬ್ಬಂದಿ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.