ಆನೇಕಲ್: ತಾಲ್ಲೂಕಿನ ಸುರಗಜಕ್ಕನಹಳ್ಳಿ ಗ್ರಾಮ ಪಂಚಾಯಿತಿಯ ನೂತನ ಉಪಾಧ್ಯಕ್ಷರಾಗಿ ಚಂದ್ರಶೇಖರ್ ಅವಿರೋಧ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿದ್ದ ರಾಜಪ್ಪ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿತ್ತು. ಚಂದ್ರಶೇಖರ್ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾದರು.
ಬಳಿಕಮಾತನಾಡಿದ ಅವರು, ಸುರಗಜಕ್ಕನಹಳ್ಳಿ ಪಂಚಾಯಿತಿಯ ಸಮಗ್ರ ಅಭಿವೃದ್ಧಿಗೆ ಶ್ರಮಿಸಲಾಗುವುದು. ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ಅಧ್ಯಕ್ಷರ ಮತ್ತು ಸದಸ್ಯರ ಸಹಕಾರದಿಂದ ಮೂಲ ಸೌಲಭ್ಯ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದರು.
ಅಧ್ಯಕ್ಷೆ ಲಲಿತಾ ಮಹದೇವಯ್ಯ ಮಾತನಾಡಿ, ಸುರಗಜಕ್ಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವುದು ನಮ್ಮ ಗುರಿ. ಮುಂದಿನ ದಿನಗಳಲ್ಲಿ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದುತಿಳಿಸಿದರು.