ಬಿಡದಿ: ಮಾಗಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಚ್.ಸಿ. ಬಾಲಕೃಷ್ಣ ಅವರು ಟೊಯೊಟಾ ಕಾರ್ಮಿಕರು ಪ್ರತಿಭಟನೆ ನಡೆಸುತ್ತಿರುವ ಸ್ಥಳಕ್ಕೆ ಶನಿವಾರ ಭೇಟಿ ನೀಡಿದರು.
ನಂತರ ಮಾತನಾಡಿದ ಅವರು, ‘ಮನುಷ್ಯನು ತಪ್ಪು ಮಾಡುವುದು ಸಹಜ. ಆದರೆ ತಪ್ಪನ್ನು ತಿದ್ದುಕೊಳ್ಳುವುದು ಅಷ್ಟೇ ಮುಖ್ಯ. ಇದನ್ನು ತಿಳಿದುಕೊಂಡು ಆಡಳಿತ ಮಂಡಳಿ ಹಾಗೂ ಕಾರ್ಮಿಕರು ಮಾತುಕತೆಯ ಮುಖಾಂತರ ಸಮಸ್ಯೆ ಬಗೆಹರಿಸಿಕೊಳ್ಳಬೇಕು’ ಎಂದು ಹೇಳಿದರು.
‘ಬಿಕ್ಕಟ್ಟು ಹೀಗೆ ಮುಂದುವರಿದರೆ, ರಾಮನಗರ ಜಿಲ್ಲಾಧಿಕಾರಿ ಕೂಡಲೇ ಮಧ್ಯಸ್ಥಿಕೆ ವಹಿಸಬೇಕು. ಇಲ್ಲವಾದರೆ ಕಚೇರಿ ಮುಂದೆ ಧರಣಿ ನಡೆಸುತ್ತೇವೆ’ ಎಂದು ಎಚ್ಚರಿಸಿದರು.
ಕಾರ್ಮಿಕ ಸಂಘದ ಕಾರ್ಯದರ್ಶಿ ಬಸವರಾಜ್ ಮಾತನಾಡಿ, ‘ಆಡಳಿತ ವರ್ಗ ಹೋರಾಟವನ್ನು ಹತ್ತಿಕ್ಕಲು ಪ್ರತಿಭಟನಾ ಸ್ಥಳಕ್ಕೆ ಬೇಲಿ ಹಾಕಲು ಪ್ರಯತ್ನಿಸುತ್ತಿದೆ. ಕಾರ್ಮಿಕ ಸಂಘ ಇದನ್ನು ತೀವ್ರವಾಗಿ ಖಂಡಿಸುತ್ತದೆ. ಈ ದುರಾಲೋಚನೆ ಬಿಟ್ಟು, ಉತ್ತಮ ಕೆಲಸದ ವಾತಾವರಣ ರೂಪಿಸಲು ಶ್ರಮಿಸಬೇಕು’ ಎಂದು ಒತ್ತಾಯಿಸಿದರು.