ವಿಜಯಪುರ (ದೇವನಹಳ್ಳಿ): ಪಟ್ಟಣದ ಹಲವು ಬೇಕರಿಗಳ ಮೇಲೆ ಸೋಮವಾರ ದಾಳಿ ನಡೆಸಿದ ಪುರಸಭೆಯ ಆರೋಗ್ಯ ನಿರೀಕ್ಷಕಿ ಲಾವಣ್ಯ ಅವರು, 20 ಕೆ.ಜಿ. ಪ್ಲಾಸ್ಟಿಕ್ ಕವರ್ ವಶಪಡಿಸಿಕೊಂಡು, ₹4 ಸಾವಿರ ದಂಡ ವಸೂಲಿ ಮಾಡಿದ್ದಾರೆ.
ಈ ವೇಳೆ ಮಾತನಾಡಿದ ಅವರು, ಪ್ಲಾಸ್ಟಿಕ್ ಕವರ್ ಬಳಕೆ ಮಾಡದಂತೆ ಹಲವಾರು ಬಾರಿ ಎಚ್ಚರಿಕೆ ನೀಡಿದ್ದರು ಸಹ ಬೇಕರಿಗಳಲ್ಲಿ ಪ್ಲಾಸ್ಟಿಕ್ ಬಳಸಲಾಗುತ್ತಿದೆ. ಹೀಗಾಗಿ ಐದು ಬೇಕರಿಗಳ ಮೇಲೆ ದಾಳಿ ನಡೆಸಿ, ಪ್ಲಾಸ್ಟಿಕ್ ವಶಪಡಿಸಿಕೊಂಡು ಬೇಕರಿ ಮಾಲೀಕರಿಂದ ದಂಡ ವಸೂಲಿ ಮಾಡಲಾಗಿದೆ ಎಂದು ತಿಳಿಸಿದರು.
ನಿಷೇಧಿತ ಪ್ಲಾಸ್ಟಿಕ್ ಬಳಸುತ್ತಿರುವ ಹೊಟೇಲ್, ದಿನಸಿ ಅಂಗಡಿ, ತರಕಾರಿ–ಹಣ್ಣು, ಸೇರಿದಂತೆ ಎಲ್ಲಾ ಅಂಗಡಿಗಳಲ್ಲಿ ದಾಳಿ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.