ದೊಡ್ಡಬಳ್ಳಾಪುರ: ‘ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದೈಹಿಕ ಆರೋಗ್ಯದಂತೆ ಮಾನಸಿಕ ಆರೋಗ್ಯದ ಕಡೆಗೂ ಜನರು ಒತ್ತು ನೀಡಬೇಕಿದೆ’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ್ ಹೇಳಿದರು.
ನಗರದಲ್ಲಿ ಗ್ರಾಮೀಣ ಅಭ್ಯುದಯ ಸೇವಾ ಸಂಸ್ಥೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಡಿ ನಡೆದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯಲ್ಲಿ ಅವರು ಮಾತನಾಡಿದರು.
‘ಜಗತ್ತಿನಲ್ಲಿ ಮಾನಸಿಕ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಆತಂಕಕಾರಿ ಸಂಗತಿ. ಮಾನಸಿಕ ಆರೋಗ್ಯದ ಬಗ್ಗೆ ಹೆಚ್ಚಿನ ಜಾಗೃತಿ ಮೂಡಬೇಕಿದೆ ಎಂದು ಹೇಳಿದರು.
ಜಿಲ್ಲಾ ಮಾನಸಿಕ ಆರೋಗ್ಯಾಧಿಕಾರಿ ಡಾ.ಶಾಂತಲಾ ಮಾತನಾಡಿ, ‘ಎಲ್ಲರಿಗೂ ಮಾನಸಿಕ ಆರೋಗ್ಯ; ಇದಕ್ಕಾಗಿ ಹೆಚ್ಚಿನ ಹೂಡಿಕೆ-ಚಿಕಿತ್ಸೆಗೆ ಅವಕಾಶ’ ಎಂಬ ಘೋಷ ವಾಕ್ಯದಡಿ ಇಡೀ ವಿಶ್ವದಾದ್ಯಂತ ವಿಶ್ವ ಮಾನಸಿಕ ಆರೋಗ್ಯ ದಿನ ಆಚರಿಸಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಗ್ರಾಮೀಣ ಅಭ್ಯುದಯ ಸೇವಾ ಸಂಸ್ಥೆಯ ಕಾರ್ಯದರ್ಶಿ ಅಮಲಿನಾಯಕ್, ಜಿಲ್ಲಾ ಮಾನಸಿಕ ರೋಗ ತಜ್ಞ ಡಾ.ಗಿರೀಶ್, ಕ್ರಾಪ್ಟಿಜನ್ ಫೌಂಡೇಷನ್ ಸಿಇಒ ಮಯೂರ, ಆರೋಗ್ಯ ಇಲಾಖೆಯ ಸುಮಾ, ಕರಿಯಪ್ಪ ಹಾಜರಿದ್ದರು.