ವಿಜಯಪುರ: ತಾಲ್ಲೂಕಿನ ಬೂದಿಗೆರೆ ಗ್ರಾಮದ ದೇಶನಾರಾಯಣಸ್ವಾಮಿ ದೇವಾಲಯದಲ್ಲಿ ಹೋಳಿ ಹುಣ್ಣಿಮೆ ಅಂಗವಾಗಿ ದೇಶ ನಾರಾಯಣಸ್ವಾಮಿ ಹಾಗೂ ರಾಮಚಂದ್ರ ಸ್ವಾಮಿ ಬ್ರಹ್ಮರಥೋತ್ಸವ ವಿಜೃಂಭಣೆಯಿಂದ ನಡೆಯಿತು.
ಇದರ ಅಂಗವಾಗಿ ದೇವರಿಗೆ ವಿಶೇಷ ಪೂಜೆ, ಹೂವಿನ ಅಲಂಕಾರ ಮಾಡಲಾಗಿತ್ತು. ಎರಡು ರಥಗಳನ್ನು ಊರಿನ ಮುಖ್ಯ ರಸ್ತೆಯಿಂದ ಸಾಯಿಬಾಬ ಮಂದಿರದವರೆಗೂ ಮೆರವಣಿಗೆ ಮಾಡಲಾಯಿತು.
ಇಷ್ಟಾರ್ಥ ಸಿದ್ಧಿಗಾಗಿ ಭಕ್ತರು ರಥಕ್ಕೆ ಬಾಳೆಹಣ್ಣು, ದವನ ಎಸೆದರು. ಉತ್ಸವದಲ್ಲಿ ವೀರಭದ್ರ ಕುಣಿತ, ತಮಟೆ ವಾದ್ಯಗಳು ಹಾಗೂ ಸಿಂಗಾರ ಮಾಡಿದ್ದ ಜೋಡೆತ್ತುಗಳ ಮೆರವಣಿಗೆ ಎಲ್ಲರ ಗಮನ ಸೆಳೆಯಿತು.
ಸಾಯಿ ಮಂದಿರದಲ್ಲಿ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಭಕ್ತರು ದರ್ಶನಕ್ಕೆ ಸಾಲುಗಟ್ಟಿ ನಿಂತು ದರ್ಶನ ಪಡೆದರು. ರಥೋತ್ಸವಕ್ಕೆ ಬಂದಿದ್ದ ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು.
ಹರ್ಷ ಮೊಯಿಲಿ, ಶಾಸಕ ನಿಸರ್ಗ ನಾರಾಯಣಸ್ವಾಮಿ, ಬಿಜೆಪಿ ಅಭ್ಯರ್ಥಿ ಬಿ.ಎನ್.ಬಚ್ಚೇಗೌಡ, ಜಿಲ್ಲಾ ಪಂಚಾಯಿತಿ ಸದಸ್ಯ ಲಕ್ಷ್ಮೀನಾರಾಯಣಪ್ಪ, ದೇವನಹಳ್ಳಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಭಾರತಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ. ಶ್ರೀನಿವಾಸ್ಗೌಡ ಇದ್ದರು.