ವಿಜಯಪುರ: ರಾಜ್ಯದ ಎಲ್ಲ ಗ್ರಾಮ ಪಂಚಾಯ್ತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸದೇ ಈಗಿರುವ ಆಡಳಿತ ಮಂಡಳಿ ಸದಸ್ಯರು ಹಾಗೂ ಅಧ್ಯಕ್ಷರನ್ನೇ ಮುಂದುವರಿಸುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮನವಿ ಮಾಡಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಈ ಸಂಬಂಧ ಯತ್ನಾಳ ಶನಿವಾರ ಪತ್ರ ಬರೆದಿದ್ದಾರೆ.
ಆಡಳಿತಾಧಿಕಾರಿಗಳ ನೇಮಕದಿಂದ ಗ್ರಾಮಗಳ ಅಭಿವೃದ್ಧಿ ಕಾರ್ಯ ಕುಂಠಿತವಾಗುತ್ತದೆ. ಜನಪ್ರತಿನಿಧಿಗಳು ಮತ್ತು ಗ್ರಾಮಸ್ಥರು ತಮ್ಮ ತಮ್ಮ ಗ್ರಾಮಗಳ ಕುಂದುಕೊರತೆಗಳು ಹಾಗೂ ಅಭಿವೃದ್ಧಿ ಬಗ್ಗೆ ಗಮನಹರಿಸಲು ಸಮಯಕ್ಕೆ ಸರಿಯಾಗಿ ಆಡಳಿತಾಧಿಕಾರಿಗಳು ಸಂಪರ್ಕಕ್ಕೆ ಸಿಗುವುದಿಲ್ಲ ಎಂದು ಅವರು ಹೇಳಿದ್ದಾರೆ.
ಮುಂದಿನ ಚುನಾವಣೆಯ ದಿನಾಂಕ ನಿಗದಿಯಾಗುವವರಿಗೆ ಈಗಿನ ಆಡಳಿತ ಮಂಡಳಿಯ ಸದಸ್ಯರು ಹಾಗೂ ಅಧ್ಯಕ್ಷರ ಅಧಿಕಾರವನ್ನು ಮುಂದುವರಿಸಬೇಕು ಎಂದು ಮನವಿ ಮಾಡಿದ್ದಾರೆ.