ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

3,312 ನೌಕರರನ್ನು ಕೆಲಸದಲ್ಲಿ ಮುಂದುವರಿಸಿ

ಹೊರಗುತ್ತಿಗೆ ನೌಕರರ ಧರಣಿ
Last Updated 13 ಡಿಸೆಂಬರ್ 2018, 12:10 IST
ಅಕ್ಷರ ಗಾತ್ರ

ಬೆಳಗಾವಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿಗಳ ವಸತಿನಿಲಯಗಳಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ 3312 ‘ಡಿ’ ಗ್ರೂಪ್ ಹೊರಗುತ್ತಿಗೆ ನೌಕರರನ್ನು ಕೆಲಸದದಿಂದ ತೆಗೆದುಹಾಕದೇ ಸೇವೆಯಲ್ಲಿ ಮುಂದುವರಿಸುವಂತೆ ಆಗ್ರಹಿಸಿ ಎಐಯುಟಿಯುಸಿ ನೇತೃತ್ವದಲ್ಲಿ ರಾಜ್ಯ ಸಂಯುಕ್ತ ವಸತಿನಿಲಯ ಕಾರ್ಮಿಕರ ಸಂಘದವರು ತಾಲ್ಲೂಕಿನ ಸುವರ್ಣ ವಿಧಾನಸೌಧ ಬಳಿಯ ಸುವರ್ಣ ಗಾರ್ಡನ್‌ನಲ್ಲಿ ಧರಣಿ ನಡೆಸಿದರು.

‘ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಸತಿನಿಲಯಗಳಲ್ಲಿ ಮಂಜೂರಾಗಿಯೂ ಖಾಲಿ ಇರುವ ಅಡುಗೆಯವರು, ಅಡುಗೆ ಸಹಾಯಕರು, ಕಾವಲುಗಾರರು, ಸ್ವಚ್ಛತೆ ಮೊದಲಾದ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾವಿರಾರು ನೌಕರರಿಗೆ ಸೇವಾ ಭದ್ರತೆ ನೀಡಬೇಕು. ಅವರ ಸೇವೆ ಕಾಯಂಗೊಳಿಸಬೇಕು ಅಥವಾ ನಿವೃತ್ತಿ ವಯಸ್ಸಿನವರೆಗೆ ಕೆಲಸದಲ್ಲಿ ಮುಂದುವರಿಸಬೇಕು’ ಎಂದು ಒತ್ತಾಯಿಸಿದರು.

‌‘ಹಲವು ತಿಂಗಳುಗಳಿಂದ ತಡೆಹಿಡಿಯಲಾಗಿರುವ ವೇತನವನ್ನು ಕೂಡಲೇ ಪಾವತಿಸಬೇಕು. ಹೊರಗುತ್ತಿಗೆ ಪದ್ಧತಿ ರದ್ದುಪಡಿಸಬೇಕು ಹಾಗೂ ನೇರವಾಗಿ ಇಲಾಖೆಯಿಂದಲೇ ಪಾವತಿಸಬೇಕು. ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ಮಮ್ಮ ಮೊದಲಾದ ವಸತಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಡಿ ಗ್ರೂಪ್ ನೌಕರರಿಗೆ ವಸತಿ ಸೌಕರ್ಯ ಕಲ್ಪಿಸಬೇಕು’ ಎಂದು ಆಗ್ರಹಿಸಿದರು.

ಶಿಕ್ಷಣದಿಂದ ಹೊರಗುಳಿದ ಬಾಲಕಿಯರಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ಉದ್ದೇಶದಿಂದ ಕಸ್ತೂರಬಾ ಗಾಂಧಿ ಬಾಲಿಕಾ ವಿದ್ಯಾಲಯಗಳಲ್ಲಿ ವಾರ್ಡನ್, ಮುಖ್ಯಶಿಕ್ಷಕರು, ಸಹಶಿಕ್ಷಕರು, ಅಕೌಂಟೆಂಟ್‌ಗಳು, ದೈಹಿಕ ಶಿಕ್ಷಣ ಶಿಕ್ಷಕರು 10–14 ವರ್ಷಗಳಿಂದಲೂ ಹೊರಗುತ್ತಿಗೆ ಮೂಲಕ ದುಡಿಯುತ್ತಿದ್ದಾರೆ. ಗುತ್ತಿಗೆಯ ಪದ್ಧತಿಯಡಿ ಅಭದ್ರತೆಯಲ್ಲಿ ಇರುವಂತಾಗಿದೆ. ಹೀಗಾಗಿ, ಕಾಯಂಗೊಳಿಸಬೇಕು. ಅಲ್ಲಿವರೆಗೆ ನೇರಗುತ್ತಿಗೆ ಮೂಲಕ ಸೇವೆಯನ್ನು ಮುಂದುವರಿಸಬೇಕು ಎಂದು ಕೆಜಿಬಿವಿ ಗುತ್ತಿಗೆ ನೌಕರರ ಸಂಘದ ಅಧ್ಯಕ್ಷ ಎನ್.ಎಸ್. ವೀರೇಶ ಒತ್ತಾಯಿಸಿದರು.

ವಸತಿನಿಲಯ ಕಾರ್ಮಿಕರ ಸಂಘದ ಅಧ್ಯಕ್ಷ ಕೆ. ಸೋಮಶೇಖರ ಯಾದಗಿರಿ ಹಾಗೂ ಕಾರ್ಯದರ್ಶಿ ಕೆ.ವಿ. ಭಟ್ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT