ಗೋಕಾಕ: ‘2004ರಿಂದ ಅರಭಾವಿ ಕ್ಷೇತ್ರದ ಶಾಸಕನಾಗಿ ಆಯ್ಕೆಯಾದಾಗಿನಿಂದ ಇಲ್ಲಿಯವರೆಗೆ ಶಿಕ್ಷಣಕ್ಕೆ ಆದ್ಯತೆ ನೀಡುತ್ತಿದ್ದೇನೆ’ ಎಂದು ಅರಭಾವಿ ಶಾಸಕರೂ ಆಗಿರುವ ಕೆಎಂಎಫ್ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ತಾಲ್ಲೂಕಿನ ದಂಡಾಪೂರ ಗ್ರಾಮದಲ್ಲಿ ₹6.11 ಕೋಟಿ ವೆಚ್ಚದಲ್ಲಿ ನಿರ್ಮಿಸುತ್ತಿರುವ ಸರ್ಕಾರಿ ಪ್ರಾಥಮಿಕ ಶಾಲಾ ಕೊಠಡಿಗಳ ನಿರ್ಮಾಣ ಮತ್ತು 31 ವಿವೇಕ ಶಾಲಾ ಕೊಠಡಿಗಳ ಉದ್ಘಾಟನೆ ನೆರವೇರಿಸಿ ಮಾತನಾಡಿರು.
‘ಪಾಮಲದಿನ್ನಿ ಹಳ್ಳದಿಂದ ದಂಡಾಪೂರವರೆಗೆ ಜಾಕ್ವೆಲ್ ನಿರ್ಮಾಣ ಮಾಡಿಕೊಡಲಾಗುವುದು. ಈಗಿರುವ ಕಾಂಗ್ರೆಸ್ ಸರ್ಕಾರವು ಕೇವಲ ಗ್ಯಾರಂಟಿ ಯೋಜನೆಗಳಿಗಾಗಿಯೇ ಅನುದಾನ ಮೀಸಲಿಡುತ್ತಿರುವುದರಿಂದ ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಬಿಡುಗಡೆ ಮಾಡುತ್ತಿಲ್ಲ’ ಎಂದು ದೂರಿದರು.
ಇದೇ ಸಂದರ್ಭದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಆರ್.ಎಂ.ಎಸ್.ಎ ಯೋಜನೆಯಡಿ ₹ 1.55 ಕೋಟಿ ವೆಚ್ಚದಲ್ಲಿ ದಂಡಾಪೂರ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ 10 ಶಾಲಾ ಕೊಠಡಿಗಳ ಬಹುಮಹಡಿ ಕಟ್ಟಡಗಳ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.
₹4.59 ಕೋಟಿ ವೆಚ್ಚದ ಮೂಡಲಗಿ ವಲಯದ ವಿವಿಧ ಗ್ರಾಮಗಳಲ್ಲಿ ನಿರ್ಮಾಣಗೊಂಡಿರುವ ವಿವೇಕ ಶಾಲಾ ಕೊಠಡಿಗಳನ್ನು ಉದ್ಘಾಟಿಸಿದರು. ಎಸ್.ಎಸ್.ಕೆ ಯೋಜನೆಯಡಿ 117 ವಿಶೇಷ ಚೇತನ ವಿದ್ಯಾರ್ಥಿಗಳಿಗೆ ₹7.47 ಲಕ್ಷ ವೆಚ್ಚದಲ್ಲಿ ಸಾಧನಾ ಸಾಮಗ್ರಿಗಳನ್ನು ವಿತರಿಸಿದರು.
ಕಾರ್ಯಕ್ರಮದಲ್ಲಿ ಪ್ರಭಾ ಶುಗರ್ಸ್ ನಿರ್ದೇಶಕರಾದ ಲಕ್ಷ್ಮಣ ಗಣಪ್ಪಗೋಳ, ಸಿದ್ಲಿಂಗಪ್ಪ ಕಂಬಳಿ, ಮಾಳಪ್ಪ ಜಾಗನೂರ, ಗ್ರಾ.ಪಂ ಮಾಜಿ ಅಧ್ಯಕ್ಷ ಮಹಾದೇವ ತುಕ್ಕಾನಟ್ಟಿ, ರಾಮಕೃಷ್ಣ ಹೊರಟ್ಟಿ, ಜಿ.ಪಂ.ಮಾಜಿ ಸದಸ್ಯ ರಾಜೇಂದ್ರ ಸಣ್ಣಕ್ಕಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
ಮೂಡಲಗಿ ವಲಯ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರ ಪ್ರಾಸ್ತಾವಿಕ ಮಾತನಾಡಿ, ಮಾ.25ರಂದು ಆರಂಭಗೊಳ್ಳಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲಿರುವ 7,957 ವಿದ್ಯಾರ್ಥಿಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಶುಭ ಕೋರಿರುವ ಪತ್ರಗಳನ್ನು ವಿತರಿಸಿದರು.