ಬೆಳಗಾವಿ: ‘ಅಖಿಲ ಭಾರತ ವೀರಶೈವ ಮಹಾಸಭೆ ಜಿಲ್ಲಾ ಘಟಕ, ಜಗಜ್ಯೋತಿ ಬಸವೇಶ್ವರ ಜಯಂತ್ಯುತ್ಸವ ಸಮಿತಿ ಹಾಗೂ ವಿವಿಧ ಲಿಂಗಾಯತ ಸಂಘಟನೆಗಳ ಸಹಯೋಗದಲ್ಲಿ ಬಸವ ಜಯಂತಿ ಅಂಗವಾಗಿ ಏ. 30ರಿಂದ ಮೇ 3ರವರೆಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ’ ಎಂದು ಜಯಂತ್ಯುತ್ಸವ ಸಮಿತಿ ಅಧ್ಯಕ್ಷೆ ಜ್ಯೋತಿ ಭಾವಿಕಟ್ಟಿ ತಿಳಿಸಿದರು.
ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ‘ಏ.30ರಂದು ಗೋವಾವೇಸ್ ಸಮೀಪದ ಬಸವೇಶ್ವರ ವೃತ್ತದಲ್ಲಿ ಉದ್ಘಾಟನೆ ಹಾಗೂ ಷಟಸ್ಥಲ ಧ್ವಜಾರೋಹಣ ನೆರವೇರಲಿದೆ. ಕಾರಂಜಿಮಠದ ಗುರುಸಿದ್ದ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಉದ್ಘಾಟಿಸಲಿದ್ದಾರೆ. ಸಂಸದೆ ಮಂಗಲಾ ಅಂಗಡಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕರಾದ ಅಭಯ ಪಾಟೀಲ, ಅನಿಲ ಬೆನಕೆ, ಲಕ್ಷ್ಮಿ ಹೆಬ್ಬಾಳಕ್ಕರ ಮತ್ತು ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ’ ಎಂದು ಮಾಹಿತಿ ನೀಡಿದರು.
‘ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಬಹುಮಾನ ನೀಡಲಾಗುವುದು. ಸಂಜೆ ಲಿಂಗಾಯತ ಭವನದಲ್ಲಿ ಮಾಸಿಕ ಅಮವಾಸ್ಯೆ ಅನುಭಾವಗೋಷ್ಠಿ ಸತ್ಸಂಗ ನಡೆಯಲಿದ್ದು, ಮಹಾಸಭೆ ಜಿಲ್ಲಾ ಘಟಕದ ಅಧ್ಯಕ್ಷೆ ರತ್ನಪ್ರಭಾ ಬೆಲ್ಲದ ಅಧ್ಯಕ್ಷತೆ ವಹಿಸಲಿದ್ದಾರೆ. ಗೀತಾ ತಿಗಡಿ ಉಪನ್ಯಾಸ ನೀಡಲಿದ್ದಾರೆ’ ಎಂದರು.
‘ಮೇ 1ರಂದು ವಚನಗಾಯನ ಸ್ಪರ್ಧೆ ನಡೆಯಲಿದೆ. ಸಂಜೆ 4ಕ್ಕೆ ಚನ್ನಮ್ಮ ವೃತ್ತದಿಂದ ಶಹಾಪುರ ಮಾರ್ಗವಾಗಿ ಬಸವೇಶ್ವರ ವೃತ್ತದವರೆಗೆ ಬೈಕ್ ರ್ಯಾಲಿ ಆಯೋಜಿಸಲಾಗಿದೆ. ಮೇ 2ರಂದು ಶಾಂತಾಯಿ ವೃದ್ಧಾಶ್ರಮದವರಿಗೆ ಹಣ್ಣು ವಿತರಿಸಲಾಗುವುದು. ಸಂಜೆ 4ಕ್ಕೆ ಲಿಂಗಾಯತ ಭವನದಲ್ಲಿ ಮಹಿಳಾ ಗೋಷ್ಠಿ ಜರುಗಲಿದ್ದು, ಲಿಂಗಾಯತ ಮಹಿಳಾ ಸಮಾಜದ ಅಧ್ಯಕ್ಷೆ ಶೈಲಜಾ ಭಿಂಗೆ ಉದ್ಘಾಟಿಸಲಿದ್ದಾರೆ. ಡಾ.ರಾಜೇಶ್ವರಿ ಮಹೇಶ್ವರಯ್ಯ ಉಪನ್ಯಾಸ ನೀಡಲಿದ್ದಾರೆ’ ಎಂದು ತಿಳಿಸಿದರು.
‘ಮೇ 3ರಂದು ಸಂಜೆ 4ಕ್ಕೆ ರಾಣಿ ಚನ್ನಮ್ಮ ವೃತ್ತದಿಂದ ಮೆರವಣಿಗೆ ಆರಂಭವಾಗಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಉದ್ಘಾಟಿಸುವರು. ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಉಪಾಧ್ಯಕ್ಷ ಪ್ರಭಾಕರ ಕೋರೆ ಫೋಟೊಗೆ ಪೂಜೆ ಸಲ್ಲಿಸಲಿದ್ದಾರೆ. ಜಿ.ಎ. ಪ್ರೌಢಶಾಲೆವರೆಗೆ ಮೆರವಣಿಗೆ ನಡೆಯಲಿದೆ’ ಎಂದರು.
ವೀರಶೈವ ಮಹಾಸಭೆ ಜಿಲ್ಲಾ ಘಟಕದ ಅಧ್ಯಕ್ಷೆ ರತ್ನಪ್ರಭಾ ಬೆಲ್ಲದ, ಮುಖಂಡರಾದ ರಮೇಶ ಕಳಸಣ್ಣವರ, ಸೋಮಲಿಂಗ ಮಾವಿನಕಟ್ಟಿ, ಎ.ಕೆ. ಪಾಟೀಲ, ಗುರುದೇವ ಪಾಟೀಲ, ಸುಜಿತ್ ಮುಳಗುಂದ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.