ಬೆಳಗಾವಿ: ಕಳಪೆ ಬೀಜ ಬಿತ್ತನೆ ಮಾಡಿ ನಷ್ಟ ಅನುಭವಿಸಿರುವ ರೈತರಿಗೆ ತಕ್ಷಣ ಪರಿಹಾರ ನೀಡಬೇಕು ಹಾಗೂ ಕಳಪೆ ಬೀಜ ಪೂರೈಸಿದ ಕಂಪನಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಭಾರತೀಯ ಕೃಷಿಕ ಸಮಾಜ ಒತ್ತಾಯಿಸಿದೆ.
ಸಂಘಟನೆಯ ಅಧ್ಯಕ್ಷ ಸಿದಗೌಡ ಮೋದಗಿ ನೇತೃತ್ವದಲ್ಲಿ ರೈತರು ಶುಕ್ರವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ನಂತರ ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದರು.
‘ಮುಂಗಾರು ಹಂಗಾಮು ಆರಂಭವಾಗಿದ್ದರೂ ಇದುವರೆಗೆ ಬೇವು ಲೇಪಿತ ರಸಗೊಬ್ಬರ ಸರಬರಾಜು ಆಗಿಲ್ಲ. ಇದರಿಂದ ರೈತರಿಗೆ ತೀವ್ರ ತೊಂದರೆಯಾಗುತ್ತಿದ್ದು, ತಕ್ಷಣ ಪೂರೈಸಲು ಕ್ರಮಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.
‘ರೈತರಿಗೆ ಮಾರಕವಾಗಿರುವ ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯನ್ನು ತಕ್ಷಣ ರದ್ದುಪಡಿಸಬೇಕು. ಕಳೆದ ವರ್ಷ ಪ್ರವಾಹದಿಂದ ಸಂಕಷ್ಟಕ್ಕೀಡಾದ ಎಲ್ಲ ಜನರಿಗೆ ತಕ್ಷಣ ಪರಿಹಾರ ವಿತರಿಸಲು ಕ್ರಮಕೈಗೊಳ್ಳಬೇಕು’ ಎಂದು ಹೇಳಿದರು.
‘ಲಾಕ್ಡೌನ್ ಪರಿಹಾರ ನೀಡಲಾಗುತ್ತಿರುವ ಹೂವು, ತರಕಾರಿ, ಹಣ್ಣಿನ ಬೆಳೆಗಾರರ ಮರು ಸಮೀಕ್ಷೆ ಮಾಡಬೇಕು. ಗೋವಿನ ಜೋಳಕ್ಕೆ ₹ 1,760 ಬೆಂಬಲ ಬೆಲೆ ಘೋಷಿಸಲಾಗಿದೆ. ಆದರೆ, ಖರೀದಿ ಕೇಂದ್ರಗಳನ್ನು ಇನ್ನೂ ಆರಂಭಿಸಿಲ್ಲ. ತಕ್ಷಣ ಆರಂಭಿಸಬೇಕು’ ಎಂದು ಒತ್ತಾಯಿಸಿದರು.
ಸಂಘದ ಸದಸ್ಯರಾದ ಆರ್.ಎಸ್. ದರ್ಗೆ, ಎ.ಎಸ್. ಕುಂದರಗಿ, ಇತರರು ಉಪಸ್ಥಿತರಿದ್ದರು.