ಬೆಳಗಾವಿ: ಗಣೇಶ ಚತುರ್ಥಿ ಹಬ್ಬದ ಮುನ್ನಾ ದಿನವಾದ ಭಾನುವಾರ ನಗರದ ಮಾರುಕಟ್ಟೆಯಲ್ಲಿ ಹೆಚ್ಚಿನ ಜನಸಂದಣಿ ಕಂಡುಬಂತು.
ಹಬ್ಬಕ್ಕೆ ಬೇಕಾಗುವ ಅಗತ್ಯ ವಸ್ತುಗಳು, ಪೂಜಾ ಸಾಮಗ್ರಿ, ಹಣ್ಣು, ಹೂವು, ಬಟ್ಟೆಗಳು, ಗಣೇಶ ಮೂರ್ತಿಗಳ ಖರೀದಿಯಲ್ಲಿ ಜನರು ತೊಡಗಿದ್ದರು. ಇದರಿಂದಾಗಿ ಖಡೇಬಜಾರ್, ಸಮಾದೇವಿ ಗಲ್ಲಿ, ಗಣಪತಿ ಗಲ್ಲಿ, ಕಿರ್ಲೋಸ್ಕರ್ ರಸ್ತೆ ಸೇರಿದಂತೆ ಮಾರುಕಟ್ಟೆ ಪ್ರದೇಶಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಯಿತು.
ಇಲ್ಲಿನ ವಿವಿಧ ಕಡೆಗಳಲ್ಲಿ ಮಂಟಪಗಳು ಬಹುತೇಕ ಸಿದ್ಧಗೊಂಡಿವೆ. ಅವುಗಳಿಗೆ ಆಕರ್ಷಕ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಸೆ. 2ರಂದು ಗಣೇಶ ಮೂರ್ತಿಗಳನ್ನು ಅಲ್ಲಿ ಪ್ರತಿಷ್ಠಾಪನೆ ಮಾಡಲಾಗುವುದು. ಇದಕ್ಕಾಗಿ ಗಣೇಶ ಮಂಡಳಗಳ ಪದಾಧಿಕಾರಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ.