ಬೆಳಗಾವಿ: ‘ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಸಂವಿಧಾನದ ಆಶಯಗಳನ್ನು ಗಾಳಿಗೆ ತೂರಿ, ಪ್ರಜಾಪ್ರಭುತ್ವ ವ್ಯವಸ್ಥೆ ನಾಶಪಡಿಸಲು ಹೊರಟಿದೆ. ಹಾಗಾಗಿ ಈ ಸಲದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸುತ್ತಿದ್ದೇವೆ’ ಎಂದು ರಾಜ್ಯ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಬಸವರಾಜ ತಳವಾರ ಹೇಳಿದರು.
ಇಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಜೆಪಿ ಸರ್ಕಾರ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಕೈಗಾರಿಕೆಗಳು ಮತ್ತು ಉದ್ಯಮಗಳನ್ನು ಖಾಸಗೀಕರಣಗೊಳಿಸಿ, ನಿರುದ್ಯೋಗ ಸಮಸ್ಯೆ ಸೃಷ್ಟಿಸಿದೆ. ತನಿಖಾ ಸಂಸ್ಥೆಗಳನ್ನು ತನ್ನ ಕೈಗೊಂಬೆಯಾಗಿ ಬಳಸಿಕೊಂಡು, ವಿರೋಧ ಪಕ್ಷಗಳ ನಾಯಕರ ಮನೆಗಳ ಮೇಲೆ ದಾಳಿ ಮಾಡುತ್ತಿದೆ. ಬಂಡವಾಳಶಾಹಿಗಳ ಹಿತಾಸಕ್ತಿಗೆ ಅನುಗುಣವಾಗಿ ಕೃಷಿಕರು, ಕಾರ್ಮಿಕರ ಕಾನೂನುಗಳನ್ನು ಬದಲಿಸುತ್ತಿದೆ. ಹಾಗಾಗಿ ಈ ಬಾರಿ ಬಿಜೆಪಿಗೆ ತಕ್ಕ ಪಾಠ ಕಲಿಸಲು ಮುಂದಾಗಿದ್ದೇವೆ’ ಎಂದರು.
ದುರಗಪ್ಪ ಮೇಲಿನಮನಿ, ರವೀಂದ್ರ ಸಣ್ಣಕ್ಕಿ ಮತ್ತಿತರರು ಇದ್ದರು.