ಬೆಳಗಾವಿ: ‘ರಾಜಕೀಯ ಕ್ಷೇತ್ರದಲ್ಲಿ ಹಿಂದುಳಿದ ವರ್ಗಗಳಿಗೆ ಸೂಕ್ತ ಸ್ಥಾನಮಾನ ಕೊಡುವ ಜೊತೆಗೆ ಎಲ್ಲರೊಂದಿಗೆ ಎಲ್ಲರ ವಿಕಾಸ ಎಂಬ ತತ್ವವನ್ನು ಅಕ್ಷರಶಃ ಅನುಷ್ಠಾನಕ್ಕೆ ತಂದ ಕೀರ್ತಿ ಭಾರತೀಯ ಜನತಾ ಪಕ್ಷಕ್ಕೆ ಸಲ್ಲುತ್ತದೆ’ ಎಂದು ಪಕ್ಷದ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ ಹೇಳಿದರು.
ನಗರದ ಗೋಮಟೇಶ್ವರ ಸಭಾಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಜೆಪಿ ಒಬಿಸಿ ಮೋರ್ಚಾ ಜಿಲ್ಲಾ ಘಟಕದ ಕಾರ್ಯಕಾರಿಣಿ ಉದ್ಘಾಟಿಸಿ ಅವರು ಮಾತನಾಡಿದರು.
‘ಹಿಂದುಳಿದ ವರ್ಗದವರು, ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಹೆಸರಿನ ಮೇಲೆ ದೇಶದಲ್ಲಿ 70 ವರ್ಷ ರಾಜಕಾರಣ ಮಾಡಿದವರು, ಬಡತನ ನಿವಾರಣೆಗೆ ಏನನ್ನೂ ಮಾಡಲಿಲ್ಲ. ಆ ಕೊರಗನ್ನು ಹೋಗಲಾಡಿಸಲು ಈಗಿನ ಪ್ರಧಾನಿ ನರೇಂದ್ರ ಮೋದಿ ಪರಿಶ್ರಮಪಡುತಿದ್ದಾರೆ’ ಎಂದರು.
ಒಬಿಸಿ ಮೋರ್ಚಾ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ವಿವೇಕಾನಂದ ಡಬ್ಬ, ಕಾರ್ಯದರ್ಶಿ ಕಿರಣ ಜಾಧವ ಮಾತನಾಡಿದರು. ಮುಖಂಡರಾದ ಬಸವರಾಜ ಮಾಳೆದೆನ್ನವರ, ಸತೀಶ ಶೇಡವಾಜ್ಕರ, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ ಮೊಹಿತೆ, ಸುಭಾಷ್ ಪಾಟೀಲ, ಸಂದೀಪ ದೇಶಪಾಂಡೆ ಪಾಲ್ಗೊಂಡಿದ್ದರು.