ಬೆಳಗಾವಿ: ಲಾರಿಯೊಂದರಲ್ಲಿ ಗೋವುಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ’ ಎಂದು ಆರೋಪಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸೋಮವಾರ ಏಳು ಮಂದಿಯನ್ನು ಬಂಧಿಸಿದ್ದಾರೆ.
ಗೋವುಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂದು ಇಲ್ಲಿನ ಸುವರ್ಣ ವಿಧಾನಸೌಧ ಬಳಿ ಭಾನುವಾರ ರಾತ್ರಿ ಭಜರಂಗದಳ ಹಾಗೂ ಶ್ರೀರಾಮಸೇನೆ ಹಿಂದೂಸ್ತಾನ್ ಸಂಘಟನೆಗಳ ಕಾರ್ಯಕರ್ತರು, ಚಾಲಕನನ್ನು ಮನಬಂದಂತೆ ಥಳಿಸಿದ್ದರು. ಲಾರಿ ಮೇಲೆ ಕಲ್ಲು ತೂರಿದ್ದರು. ಇದರ ವಿಡಿಯೊ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು.
‘ಒಟ್ಟಾರೆ ಪ್ರಕರಣ ಕುರಿತು ಹಿರೇಬಾಗೇವಾಡಿ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ. ಗೋವು ಸಾಗಣೆ ಸಂಬಂಧ ಇಬ್ಬರ ಮೇಲೆ ಕೇಸ್ ಹಾಕಿ, ಇಬ್ಬರು ಆರೋಪಿಗಳನ್ನು ಪತ್ತೆ ಮಾಡಿದ್ದೇವೆ. ಕಲ್ಲು ತೂರಾಟ, ದೊಂಬಿಗೆ ಸಂಬಂಧಿಸಿದಂತೆ ಸಂಘಟನೆಗಳ ಏಳು ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಲಾಗಿದೆ’ ಎಂದು ನಗರ ಪೊಲೀಸ್ ಕಮಿಷನರ್ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ತಿಳಿಸಿದರು.
‘ಯಮಕನಮರಡಿಯಿಂದ ಹಸುಗಳನ್ನು ಎಲ್ಲಿಗೆ ಸಾಗಿಸಲಾಗುತ್ತಿತ್ತು ಎಂಬ ಬಗ್ಗೆ ತನಿಖೆ ನಡೆದಿದೆ. ಜತೆಗೆ, ಗಲಭೆ ಯಾರ ನೇತೃತ್ವದಲ್ಲಿ ನಡೆದಿದೆ ಎಂಬ ಬಗ್ಗೆಯೂ ವಿಚಾರಣೆ ನಡೆಸಿದ್ದೇವೆ’ ಎಂದರು.