ಬೆಳಗಾವಿ: ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯ ಪ್ರಯುಕ್ತ ವಿವಿಧೆಡೆ ಸಂಚರಿಸಲಿರುವ ಜಾಗೃತಿ ರಥಕ್ಕೆ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಆರ್.ಜೆ. ಸತೀಶ್ಸಿಂಗ್ ಹಾಗೂ ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ಶುಕ್ರವಾರ ಹಸಿರು ನಿಶಾನೆ ತೋರಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ರಾಷ್ಟ್ರೀಯ ಬಾಲಕಾರ್ಮಿಕ ಯೋಜನೆ, ವಿವಿಧ ಇಲಾಖೆಗಳು, ಕಾರ್ಮಿಕ ಸಂಘಗಳು ಹಾಗೂ ಸರ್ಕಾರೇತರ ಸಂಸ್ಥೆಗಳ ವತಿಯಿಂದ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕಾರ್ಯಕ್ರಮ ನಡೆಯಿತು.
‘ಕೊರೊನಾ ಹಿನ್ನೆಲೆಯಲ್ಲಿ ವಿಶೇಷ ಜಾಗೃತಿ ರಥದ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ. ಬಾಲಕಾರ್ಮಿಕ ಪದ್ಧತಿಯು ಸಂಪೂರ್ಣ ನಿರ್ಮೂಲನೆ ಆಗಬೇಕು. ಈ ನಿಟ್ಟಿನಲ್ಲಿ ಜಾಗೃತಿ ಕಾರ್ಯಕ್ರಮ ಕೈಗೊಳ್ಳಲಾಗಿದೆ’ ಎಂದು ಸತೀಶ್ ಸಿಂಗ್ ಹೇಳಿದರು.
ಉಪ ಕಾರ್ಮಿಕ ಆಯುಕ್ತ ವೆಂಕಟೇಶ ಶಿಂದಿಹಟ್ಟಿ, ‘ಜಾಗೃತಿ ರಥವು ನಗರ ಮತ್ತು ಬೆಳಗಾವಿ ತಾಲ್ಲೂಕಿನ ವಿವಿಧ ಪ್ರದೇಶಗಳಲ್ಲಿ ಜೂನ್ 15ರವರೆಗೆ ಸಂಚರಿಸಿ ಮಾಡಿ ಜಾಗೃತಿ ಮೂಡಿಸುತ್ತದೆ’ ಎಂದರು.
‘ನಗರ ಹೊರತುಪಡಿಸಿ ತಾಲ್ಲೂಕು ಪ್ರದೇಶದಲ್ಲಿ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ನಡೆಸಲಾಗುವುದು. 14ರಿಂದ 18 ವರ್ಷದೊಳಗಿನವರನ್ನು ಅಪಾಯಕಾರಿ ಕೆಲಸಗಳಲ್ಲಿ ತೊಡಗಿಸಿಕೊಂಡರೆ ಅಂತಹ ಕಟ್ಟಡ ಮಾಲೀಕರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುತ್ತಿದೆ’ ಎಂದು ಮಾಹಿತಿ ನೀಡಿದರು.
ನಗರ ಪೊಲೀಸ್ ಆಯುಕ್ತ ಬಿ.ಎಸ್. ಲೋಕೇಶ್ಕುಮಾರ್, ಸಹಾಯಕ ಕಾರ್ಮಿಕ ಆಯುಕ್ತ ಡಿ.ಜಿ. ನಾಗೇಶ, ಕಾರ್ಮಿಕ ಅಧಿಕಾರಿಗಳಾದ ಮಲ್ಲಿಕಾರ್ಜುನ ಜೋಗುರ, ತರನ್ನುಮ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಭಾರ ಉಪ ನಿರ್ದೇಶಕ ಗುರುನಾಥ ಕಡಬೂರ ಇದ್ದರು.