ಬೆಳಗಾವಿ: ‘ಕೋವಿಡ್ ನಿಯಂತ್ರಿಸಲು ಸರ್ಕಾರ ಮಾಡಿರುವ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿರುವ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಲೀಗಲ್ ನೋಟಿಸ್ ನೀಡಲು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಚಿಂತನೆ ನಡೆಸಿದ್ದಾರೆ’ ಎಂದು ಸಚಿವ ರಮೇಶ ಜಾರಕಿಹೊಳಿ ಹೇಳಿದರು.
ಇಲ್ಲಿನ ವಿಮಾನ ನಿಲ್ದಾಣದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಆಡಳಿತ ಪಕ್ಷದ ವಿರುದ್ಧ ಆರೋಪ ಮಾಡುವುದು ವಿರೋಧ ಪಕ್ಷದವರ ಕೆಲಸ. ಅದನ್ನು ಅವರು ಮಾಡುತ್ತಿದ್ದಾರೆ. ಇದಕ್ಕೆ ಸಂಬಂಧಪಟ್ಟ ಸಚಿವರು ಈಗಾಗಲೇ ಪ್ರತಿಕ್ರಿಯೆ ನೀಡಿದ್ದಾರೆ’ ಎಂದರು.
‘ಎಚ್.ವಿಶ್ವನಾಥ್ ಅವರನ್ನು ವಿಧಾನ ಪರಿಷತ್ತಿನ ಸದಸ್ಯರನ್ನಾಗಿ ಮಾಡಿರುವುದು ಸಂತೋಷ ತಂದಿದೆ. ಅವರಿಗೆ ಸಚಿವ ಸ್ಥಾನ ನೀಡುವ ವಿಚಾರದಲ್ಲಿ ಯಾವುದೇ ಸಭೆ ನಡೆದಿಲ್ಲ. ಸಚಿವ ಸ್ಥಾನ ನೀಡುವುದು, ಬಿಡುವುದು ಮುಖ್ಯಮಂತ್ರಿ ಅವರ ಪರಮಾಧಿಕಾರ’ ಎಂದು ಹೇಳಿದರು.
‘ಬೆಳಗಾವಿಯ ಜಿಲ್ಲಾಸ್ಪತ್ರೆಯ ಎದುರು ಆಂಬುಲೆನ್ಸ್ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಸೋಮವಾರ ಹಿರಿಯ ಅಧಿಕಾರಿಗಳ ಸಭೆ ಕರೆದಿದ್ದೇನೆ’ ಎಂದು ತಿಳಿಸಿದರು.