ಬೆಳಗಾವಿ: ‘ಪ್ರಚೋದನಕಾರಿ ಹೇಳಿಕೆ ನೀಡಿದ ಬಳ್ಳಾರಿ ಶಾಸಕ ಸೋಮಶೇಖರ ರೆಡ್ಡಿ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ವಿನಯ ನವಲಗಟ್ಟಿ ನೇತೃತ್ವದಲ್ಲಿ ಕಾರ್ಯಕರ್ತರು ನಗರ ಪೊಲೀಸ್ ಆಯುಕ್ತ ಬಿ.ಎಸ್. ಲೋಕೇಶ್ಕುಮಾರ್ ಅವರಿಗೆ ಭಾನುವಾರ ಮನವಿ ಸಲ್ಲಿಸಿದರು.
‘ಸೋಮಶೇಖರ ರೆಡ್ಡಿ ಇತ್ತೀಚಿಗೆ ಸಿಎಎ ಬೆಂಬಲಿಸಿ ನಡೆದ ರ್ಯಾಲಿಯಲ್ಲಿ ನಿರ್ದಿಷ್ಟ ಸಮುದಾಯನ್ನು ಗುರಿಯಾಗಿಸಿಕೊಂಡು ಮಾತನಾಡಿದ್ದಾರೆ. ದೇಶವು ಒಂದೇ ಜಾತಿ, ಒಂದೇ ಭಾಷೆಗೆ ಸೀಮಿತವಾಗಿಲ್ಲ. ಆದರೆ, ಅವರು ಸಾರ್ವಜನಿಕ ಸಭೆಯಲ್ಲಿ ಈ ರೀತಿ ಹೇಳಿರುವುದು ಸರಿಯಲ್ಲ. ಸಮಾಜದ ಶಾಂತಿ ಹಾಳು ಮಾಡುವಂತಹ ಹೇಳಿಕೆ ನೀಡುತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
‘ದೇಶದಲ್ಲಿಎಲ್ಲ ಧರ್ಮದವರೂ ಸಹೋದರರಂತೆ ಬಾಳುತ್ತಿದ್ದಾರೆ. ಹೀಗಿರುವಾಗ ಪ್ರಚೋದನಕಾರಿ ಹೇಳಿಕೆ ನೀಡಿ ಸಮಾಜದ ಶಾಂತಿ ಕದಡಲು ಯತ್ನಿಸಿರುವ ರೆಡ್ಡಿ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.
ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷ ಸಲೀಂ ಕತ್ತಿಬ್, ರಸುಲ್ ಮುಲ್ಲಾ, ಎಂ.ಎಂ. ಅತ್ತಾರ, ಎಂ.ಬಿ. ಜಮಾದಾರ, ಪರಶುರಾಮ ವಗ್ಗಣ್ಣನವರ, ಗಜು ದರನಾಯಕ ಇದ್ದರು.