‘ಕೃಷಿ ಸಂಪೂರ್ಣ ಬಂಡವಾಳಶಾಹಿಗಳ ಕೈಗೆ ಸಿಲುಕುವ ಆತಂಕ’

ಬೆಳಗಾವಿ: ‘ಕೇಂದ್ರ ಸರ್ಕಾರ ಜಾರಿಗೊಳಿಸುತ್ತಿರುವ ಕೃಷಿ ಕಾಯ್ದೆಗಳಿಂದಾಗಿ ಕೃಷಿ ಸಂಪೂರ್ಣ ಬಂಡವಾಳಶಾಹಿಗಳ ಕೈಗೆ ಸಿಲುಕುವ ಆತಂಕವಿದೆ’ ಎಂದು ಕಾಂಗ್ರೆಸ್ ಮುಖಂಡ ಮತ್ತು ಹರ್ಷ ಶುಗರ್ಸ್ ವ್ಯವಸ್ಥಾಪಕ ನಿರ್ದೇಶಕ ಚನ್ನರಾಜ ಹಟ್ಟಿಹೊಳಿ ದೂರಿದರು.
ನೂತನ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ರೈತ ಸಂಘಟನೆಗಳು ಕರೆ ನೀಡಿದ್ದ ಭಾರತ ಬಂದ್ ಬೆಂಬಲಿಸಿ ಇಲ್ಲಿನ ರಾಣಿ ಚನ್ನಮ್ಮ ವೃತ್ತದಲ್ಲಿ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ವಿನಯ ನಾವಲಗಟ್ಟಿ ನೇತೃತ್ವದಲ್ಲಿ ಪಕ್ಷದಿಂದ ನಡೆಸಿದ ಪ್ರತಿಭಟನೆ ವೇಳೆ ಅವರು ಮಾತನಾಡಿದರು.
‘ಕೋವಿಡ್ ಸಂಕಷ್ಟದ ಸಂದರ್ಭ ಬಳಸಿಕೊಂಡು ತರಾತುರಿಯಲ್ಲಿ ಕಾಯ್ದೆಗಳನ್ನು ಮಂಡಿಸಲಾಗಿದೆ. ಅಧಿವೇಶನದಲ್ಲಿ ಸುದೀರ್ಘ ಚರ್ಚೆಯೇ ಆಗದಿದ್ದಾಗ ಜನರಿಗೆ ಕಾಯ್ದೆ ಅರ್ಥವಾಗುವುದು ಹೇಗೆ? ರೈತರು ಪ್ರತಿಭಟನೆ ಆರಂಭಿಸಿದಾಗ ಹತ್ತಿಕ್ಕುವ ಪ್ರಯತ್ನ ಮಾಡಿದ್ದೇಕೆ? ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಜಲಫಿರಂಗಿ, ಲಾಠಿ ಬಳಸಿ ಕೆರಳಿಸುವ ಪ್ರಯತ್ನ ಮಾಡಿದ್ದೇಕೆ? ರೈತರು ನಿಮ್ಮ ಕಣ್ಣಿಗೆ ಭಯೋತ್ಪಾದಕರಂತೆ ಕಂಡರಾ?’ ಎಂದು ಕೇಳಿದರು.
‘ಕೇಂದ್ರದ ರೈತ ವಿರೋಧಿ ನೀತಿಯನ್ನು ರಾಜಕೀಯ ಪಕ್ಷಗಳು ವಿರೋಧಿಸುವುದು ತಪ್ಪೇ?’ ಎಂದ ಅವರು, ಪಂಜಾಬ್ ನಾಲ್ಕೈದು ತಿಂಗಳಿಂದ ಪ್ರತಿಭಟನೆ ನಡೆಯುತ್ತಿದ್ದರೂ ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಲಿಲ್ಲ’ ಎಂದು ಆರೋಪಿಸಿದರು.
ಮಹಿಳಾ ಘಟಕದ ಅಧ್ಯಕ್ಷೆ ಜಯಶ್ರೀ ಮಾಳಗಿ, ಮುಖಂಡ ಅಡಿವೇಶ ಇಟಗಿ ಇದ್ದರು.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.