ಬೆಳಗಾವಿ: ‘ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆ ಕಂಡುಬಂದಿಲ್ಲ. ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಯಾವುದೇ ಕಾರಣಕ್ಕೂ ಆಕ್ಸಿಜನ್ ಕೊರತೆ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು’ ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇಲ್ಲಿ ಶುಕ್ರವಾರ ನಡೆದ ಆರೋಗ್ಯ ಇಲಾಖೆಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
‘ತುರ್ತು ಪರಿಸ್ಥಿತಿ ನಿಭಾಯಿಸಲು ಅನುಕೂಲ ಆಗುವಂತೆ ನಿರಂತರವಾಗಿ ಆಕ್ಸಿಜನ್ ಲಭ್ಯತೆ ಇರುವಂತೆ ಕ್ರಮ ಕೈಗೊಳ್ಳಲಾಗುವುದು. ನಿಪ್ಪಾಣಿ ಹಾಗೂ ಬೆಳಗಾವಿಯಲ್ಲಿರುವ ಆಕ್ಸಿಜನ್ ಸರಬರಾಜುದಾರರ ಬಳಿ ಇರುವ ಆಕ್ಸಿಜನ್ ಅನ್ನು ಕಡ್ಡಾಯವಾಗಿ ಮೊದಲು ಜಿಲ್ಲೆಯ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಪೂರೈಸಬೇಕು. ಅದೇ ರೀತಿ ಕೊಲ್ಹಾಪುರ ಮತ್ತು ಬಳ್ಳಾರಿಯಿಂದ ಇದುವರೆಗೆ ಪಡೆಯಲಾಗುತ್ತಿದ್ದ ಆಕ್ಸಿಜನ್ ಅನ್ನು ಕೂಡ ಯಥಾಪ್ರಕಾರ ತೆಗೆದುಕೊಳ್ಳಬೇಕು’ ಎಂದು ತಿಳಿಸಿದರು.
ಸಹಾಯಕ ಔಷಧ ನಿಯಂತ್ರಕ ರಘುರಾಮ್ ನಿಡವಂದ ಜಿಲ್ಲೆಯಲ್ಲಿ ಆಕ್ಸಿಜನ್ ಲಭ್ಯತೆಯ ಮಾಹಿತಿ ನೀಡಿದರು.
ನಗರ ಪೊಲೀಸ್ ಆಯುಕ್ತ ಕೆ. ತ್ಯಾಗರಾಜನ್, ಜಿಲ್ಲಾ ಪಂಚಾಯ್ತಿ ಸಿಇಒ ಎಚ್.ವಿ. ದರ್ಶನ್, ಎಸ್ಪಿ ಲಕ್ಷ್ಮಣ ನಿಂಬರಗಿ, ಹೆಚ್ಚುವರಿ ಜಿಲ್ಲಾಧಿಕಾರಿ ಯೋಗೇಶ್ವರ್, ಡಿಎಚ್ಒ ಡಾ.ಎಸ್.ವಿ. ಮುನ್ಯಾಳ ಇದ್ದರು.