ಅಥಣಿ: ಇಲ್ಲಿನ ಮಿನಿವಿಧಾನಸೌಧದಲ್ಲಿ ಬುಧವಾರ ನಡೆದ ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಕೊರೊನಾ ಮಾರ್ಗಸೂಚಿಗಳು ಪಾಲನೆಯಾಗಲಿಲ್ಲ. ಪಾಲ್ಗೊಂಡಿದ್ದವರು ಅಂತರ ಕಾಯ್ದುಕೊಳ್ಳಲಿಲ್ಲ.
‘ತಾಲ್ಲೂಕು ಆಡಳಿತ ಕೋವಿಡ್ ಮಾರ್ಗಸೂಚಿಗಳನ್ನು ಸಂಪೂರ್ಣ ಉಲ್ಲಂಘಿಸಿದೆ’ ಎಂದು ಮುಖಂಡ ಸಿದ್ದಾರ್ಥ ಶಿಂಗೆ ಮೊದಲಾದವರು ಆರೋಪಿಸಿದರು.
‘ಅಧಿಕಾರಿಗಳು ಹೆಚ್ಚಿನ ಪ್ರಮಾಣದಲ್ಲಿ ಜನರನ್ನು ಸೇರಿಸಿ ಸಭೆ ನಡೆಸಿದ್ದಾರೆ. ಅಂತರ ಕಾಯ್ದುಕೊಳ್ಳಲು ವ್ಯವಸ್ಥೆ ಕೂಡ ಮಾಡಿರಲಿಲ್ಲ’ ಎಂದು ಮುಖಂಡ ಸಂಜಯ ಕಾಂಬಳೆ ದೂರಿದರು.
ಕೆಲವು ಸಂಘಟನೆಗಳಿಗೆ ಮಾಹಿತಿ ನೀಡದಿದ್ದಕ್ಕೆ ಆಕ್ರೋಶ ವ್ಯಕ್ತವಾಯಿತು. ಮಾಧ್ಯಮ ಪ್ರತಿನಿಧಿಗಳಿಗೂ ಮಾಹಿತಿ ಕೊಟ್ಟಿರಲಿಲ್ಲ.
‘ಪಟ್ಟಣದಲ್ಲಿರುವ ಕನ್ನಡೇತರ ನಾಮಫಲಕಗಳನ್ನು ತೆರವುಗೊಳಿಸಬೇಕು’ ಎಂದು ಮುಖಂಡರು ಸಭೆಯಲ್ಲಿ ಒತ್ತಾಯಿಸಿದರು.
ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯು ಪರೀಕ್ಷೆಗಳಲ್ಲಿ ಕನ್ನಡ ಮಾಧ್ಯಮದಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲು ತೀರ್ಮಾನಿಸಲಾಯಿತು. ಕೋವಿಡ್ ಕಾರಣದಿಂದ ರಾಜ್ಯೋತ್ಸವ ಪ್ರಶಸ್ತಿ ನೀಡದಿರಲು ನಿರ್ಧರಿಸಲಾಯಿತು.