ಬೆಳಗಾವಿ: ಸೈಬರ್ ವಂಚಕರು ಮ್ಯಾಟ್ರಿಮೋನಿಯಲ್ ಜಾಲತಾಣದ ಮೂಲಕ ಖಾತೆ ತೆರೆದು ಗ್ರಾಹಕರಿಂದ ಹಣ ವಂಚಿಸುತ್ತಿರುವ ಬಗ್ಗೆ ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಾಟ್ಸ್ ಆ್ಯಪ್ ಆಡಿಯೊ ಹಾಗೂ ವಿಡಿಯೊ ಕರೆ ಮಾಡಿ ಬೇರೆ ಬೇರೆ ಕಾರಣಗಳನ್ನು ತಿಳಿಸಿ, ಹಣ ಹಾಕಿಸಿಕೊಂಡು ವಂಚಿಸುತ್ತಿರುವುದು ಕಂಡುಬಂದಿದೆ. ಪ್ರಕರಣದ ತನಿಖೆ ಮುಂದುವರಿದಿದೆ. ಸಾರ್ವಜನಿಕರು ಇಂತಹ ವಂಚಕರ ಬಲೆಗೆ ಬೀಳದಂತೆ ಎಚ್ಚರ ವಹಿಸಬೇಕು ಎಂದು ನಗರ ಪೊಲೀಸ್ ಆಯುಕ್ತ ಕೆ.ತ್ಯಾಗರಾಜನ್ ತಿಳಿಸಿದ್ದಾರೆ.
ಮದ್ಯ ಮಾರಾಟ: ಪ್ರಕರಣ
ಬೆಳಗಾವಿ: ಲಾಕ್ಡೌನ್ ನಡುವೆಯೇ ಕಿರಣಾ ಅಂಗಡಿಯಲ್ಲಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಕಾಕತಿ ಠಾಣೆ ಪೊಲೀಸರು ಸೋಮವಾರ ಪ್ರಕರಣ ದಾಖಲಿಸಿದ್ದಾರೆ.
ತಾಲ್ಲೂಕಿನ ಕಾಕತಿಯ ಮಹಾಲಕ್ಷ್ಮಿ ಜನರಲ್ ಸ್ಟೋರ್ನ ಭೀಮಸೇನ ಚನ್ನಪ್ಪ ಕುಂಬಾರ (50) ವಿರುದ್ಧ ಪ್ರಕರಣ ದಾಖಲಾಗಿದೆ. 4 ಲೀಟರ್ ಮದ್ಯ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕ್ಯಾಂಪ್ ಠಾಣೆ ವ್ಯಾಪ್ತಿಯಲ್ಲಿ ಸಲೂನ್ ತೆರೆದಿದ್ದ ಮೊಹದ್ ಶಾವೇಜ್ ಮತ್ತು ವಾಸೀಮ್ ಬೇಪಾರಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. 38 ವಾಹನಗಳನ್ನು ಜಪ್ತಿ ಮಾಡಲಾಗಿದೆ. ಮಾಸ್ಕ್ ಧರಿಸದೆ ಸಂಚರಿಸುತ್ತಿದ್ದ 222 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಡಿಸಿಪಿ ವಿಕ್ರಂ ಅಮಟೆ ತಿಳಿಸಿದ್ದಾರೆ.