ಬೆಳಗಾವಿ: ನೆರೆಯ ಮಹಾರಾಷ್ಟ್ರ ಹಾಗೂ ಜಿಲ್ಲೆಯಲ್ಲಿ ವ್ಯಾಪಕ ಮಳೆ ಆಗುತ್ತಿರುವುದರಿಂದ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ನಿಪ್ಪಾಣಿ ಮತ್ತು ಚಿಕ್ಕೋಡಿ ತಾಲ್ಲೂಕಿನ ನದಿ ತೀರದ ಗ್ರಾಮಗಳಿಗೆ ಗುರುವಾರ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಅವರು ನಿಪ್ಪಾಣಿ ತಾಲ್ಲೂಕಿನ ಭಿವಶಿ, ಸಿದ್ನಾಳ ಹಾಗೂ ಹುನ್ನರಗಿಯಲ್ಲಿ ಪರಿಶೀಲನೆ ನಡೆಸಿದರು. ‘ಮಳೆ ಪ್ರಮಾಣ ಜಾಸ್ತಿ ಆಗಿದೆ. ಹೀಗಾಗಿ, ತುರ್ತು ಪರಿಸ್ಥಿತಿ ನಿರ್ವಹಣೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು’ ಎಂದು ಸಚಿವರು ಸೂಚಿಸಿದರು.
‘ಜನರ ರಕ್ಷಣೆಗೆ ಬೋಟ್ಗಳನ್ನು ಸಜ್ಜಾಗಿಟ್ಟುಕೊಳ್ಳಬೇಕು. ತಕ್ಷಣವೇ ಪರಿಹಾರ ಕೇಂದ್ರ ಆರಂಭಿಸಿ, ವಸತಿ ಮತ್ತು ಊಟೋಪಹಾರದ ವ್ಯವಸ್ಥೆ ಕಲ್ಪಿಸಬೇಕು’ ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಸಂಸದ ಅಣ್ಣಾಸಾಹೇಬ ಜೊಲ್ಲೆ ಚಿಕ್ಕೋಡಿಯ ಕೆಲವು ಗ್ರಾಮಗಳಿಗೆ ಭೇಟಿ ನೀಡಿದರು. ಮಾಂಜರಿ ಸೇತುವೆ ಬಳಿ ಕೃಷ್ಣಾ ನದಿಯ ಹರಿವು ಪರಿಶೀಲಿಸಿದರು. ಯಡೂರ, ಯಡೂರವಾಡಿಯ ಪಿರಾಜೆ ತೋಟ, ಚಂದೂರ, ಚಂದೂರ ಟೇಕ್ ಗ್ರಾಮಗಳಲ್ಲಿ ಪರಿಸ್ಥಿತಿ ಅವಲೋಕಿಸಿದರು.
ಯಡೂರದಲ್ಲಿ ಎನ್ಡಿಆರ್ಎಫ್ ತಂಡದೊಂದಿಗೆ ಚರ್ಚಿಸಿದ ಜಿಲ್ಲಾಧಿಕಾರಿ, ‘ತುರ್ತು ಪರಿಸ್ಥಿತಿಯ ಸಮರ್ಪಕ ನಿರ್ವಹಣೆಗೆ ಸಜ್ಜಾಗಿರಬೇಕು’ ಎಂದು ತಿಳಿಸಿದರು.
ಅಂಕಲಿ ಶಾಲೆಯಲ್ಲಿ ಪರಿಹಾರ ಕೇಂದ್ರ ತೆರೆಯಲು ಲಭ್ಯವಿರುವ ಸೌಕರ್ಯಗಳನ್ನು ಪರಿಶೀಲಿಸಿದರು.
ಎಸ್ಪಿ ಲಕ್ಷ್ಮಣ ನಿಂಬರಗಿ, ಉಪ ವಿಭಾಗಾಧಿಕಾರಿ ರವೀಂದ್ರ ಕರಲಿಂಗಣ್ಣವರ ಇದ್ದರು.