ಬೆಳಗಾವಿ: ‘ಕೋವಿಡ್-19 ಲಸಿಕೆ ಬಂದ ನಂತರ ಸರ್ಕಾರದ ಮಾರ್ಗಸೂಚಿ ಪ್ರಕಾರ ಜಿಲ್ಲೆಯಲ್ಲಿ ಎಲ್ಲರಿಗೂ ಸಮರ್ಪಕವಾಗಿ ತಲುಪಿಸಲು ಆರೋಗ್ಯಾಧಿಕಾರಿಗಳು ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಸೂಚಿಸಿದರು.
ಇಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ಕಾರ್ಯಪಡೆಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
‘ಲಸಿಕೆ ತಲುಪಿಸಲು ಎಲ್ಲ ಮುನ್ನೆಚ್ಚರಿಕೆ ಕೈಗೊಳ್ಳುವುದರ ಜತೆಗೆ ಸಮರ್ಪಕ ದತ್ತಾಂಶವನ್ನು ಜಿಲ್ಲಾಡಳಿತಕ್ಕೆ ಒದಗಿಸಬೇಕು. ಜಿಲ್ಲೆಯು ಜನರಿಗೆ ಆರೋಗ್ಯ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಉತ್ತಮ ಸ್ಥಾನವನ್ನು ಹೊಂದಿದೆ. ಇದೇ ರೀತಿ ಪ್ರಾಮಾಣಿಕವಾದ ಪ್ರಯತ್ನವನ್ನು ಮುಂದುವರಿಸಲು ಜಿಲ್ಲಾ ಆರೋಗ್ಯಾಧಿಕಾರಿಗಳು, ಪ್ರತಿ ತಾಲ್ಲೂಕಿನ ಆರೋಗ್ಯಾಧಿಕಾರಿಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು, ಶುಶ್ರೂಷಕಿಯರು ಹಾಗೂ ಆಶಾ ಕಾರ್ಯಕರ್ತೆಯರು ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು’ ಎಂದು ತಿಳಿಸಿದರು.
‘ಕೋವಿಡ್–19 ಕಾರಣದಿಂದ ಬಾಣಂತಿಯರು ಆಸ್ಪತ್ರೆಗಳಿಗೆ ತೆರಳಲು ಹಿಂದೇಟು ಹಾಕುತ್ತಿರುವುದರಿಂದ, ಅವರು ಹಾಗೂ ಮಗುವಿನ ಆರೋಗ್ಯದ ದೃಷ್ಟಿಕೋನದಿಂದ ಬಿ.ಸಿ.ಜಿ. ಮೊದಲಾದ ಲಸಿಕೆಯನ್ನು ಆಶಾ ಕಾರ್ಯಕರ್ತೆ ಮೂಲಕ ಅವರ ಮನೆಗೆ ತಲುಪಿಸುವ ಕಾರ್ಯ ಮಾಡಬೇಕು’ ಎಂದು ನಿರ್ದೇಶನ ನೀಡಿದರು.
ಅತ್ಯಾಧುನಿಕ ಸಂಗ್ರಹಣಾ ಘಟಕ:ಜಿಲ್ಲಾ ಸಂತಾನೋತ್ಪತಿ ಮತ್ತು ಮಕ್ಕಳ (ಆರ್ಸಿಎಚ್) ಅಧಿಕಾರಿ ಡಾ.ಐ.ಪಿ. ಗಡಾದ ಮಾತನಾಡಿ, ‘ಕೋವಿಡ್-19 ಲಸಿಕೆ ಸಂಗ್ರಹಿಸಿಡಲು ಈಗಾಗಲೇ ನಗರದ ವ್ಯಾಕ್ಸಿನ್ ಡಿಪೊದಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಹೊಂದಿದ ಸ್ಟೋರೇಜ್ ಸಿದ್ಧವಿದೆ. ಮಾರ್ಚ್ ಅಂತ್ಯದೊಳಗೆ ದೊಡ್ಡ ಪ್ರಮಾಣದಲ್ಲಿ ವ್ಯಾಕ್ಸಿನ್ ಸಂಗ್ರಹಣೆಗೆ ಘಟಕವನ್ನು ಸಜ್ಜುಗೊಳಿಸಲಾಗುವುದು’ ಎಂದು ವಿವರಿಸಿದರು.
ವಿಶ್ವ ಆರೋಗ್ಯ ಸಂಸ್ಥೆಯ ಎಸ್.ಎಂ.ಒ. ಡಾ.ಸಿದ್ದಲಿಂಗಯ್ಯ ಮಾತನಾಡಿ, ‘ಶಾಲಾ ಮಕ್ಕಳ ಆರೋಗ್ಯ ದೃಷ್ಟಿಯಿಂದ ಅವರಿಗೂ ಲಸಿಕೆ ತಲುಪಿಸುವ ಯೋಜನೆ ರೂಪಿಸಲಾಗಿದೆ. ಪ್ರತಿ ಶಾಲಾ ಮಕ್ಕಳಿಗೆ ತಲುಪಿಸುವ ಗುರಿ ಹೊಂದಲಾಗಿದೆ. ನೆರೆ ರಾಷ್ಟ್ರಗಳಾದ ಪಾಕಿಸ್ತಾನ ಹಾಗೂ ಅಪಘಾನಿಸ್ತಾನದಲ್ಲಿ ಜನರು ಪೋಲಿಯೊ ಸಮಸ್ಯೆಯಿಂದ ಈಗಲು ಬಳಲುತ್ತಿದ್ದು, ಭಾರತದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲಾ ಕಡೆಗೆ ಸರ್ವೇಕ್ಷಣಾ ಕಾರ್ಯಕ್ರಮಗಳು ಜಾರಿಯಲ್ಲಿವೆ. ಪೋಲಿಯೊ ಮುಕ್ತ ದೇಶವನ್ನಾಗಿಸಲು ಸರ್ಕಾರವು ಹಲವಾರು ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದು, ಅನುಷ್ಠಾನಗೊಳ್ಳುತ್ತಿವೆ’ ಎಂದರು.
ಡಿಎಚ್ಒ ಡಾ.ಎಸ್.ವಿ. ಮುನ್ಯಾಳ, ಜಿಲ್ಲಾ ಸರ್ಜನ್ ಡಾ.ಎಸ್.ಎಂ. ಖಾಜಿ, ತಾಲ್ಲೂಕು ಆರೋಗ್ಯಾಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.
---
ಸರ್ಕಾರದ ಮಾರ್ಗಸೂಚಿ ಪ್ರಕಾರ ಲಸಿಕೆ ತಲುಪಿಸಲು ಪೂರ್ವ ತಯಾರಿ ನಡೆದಿದೆ. ಮೊದಲ ಹಂತದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರಿಗೆ ನೀಡಲು ಯೋಜನೆ ರೂಪಿಸಲಾಗಿದೆ
- ಪ್ರವೀಣಸ್ವಾಮಿ,ಯುಎನ್ಡಿಪಿಅಧಿಕಾರಿ
ಜಿಲ್ಲೆಯಲ್ಲಿ ಕೋವಿಡ್-19ನಿಂದ ಗುಣಮುಖರಾದ ಶೇ 23.7ರಷ್ಟು ಮಂದಿಯ ದೇಹದಲ್ಲಿ ಈಗಾಗಲೇ ರೋಗ ನಿರೋಧಕ ಶಕ್ತಿ ಬೆಳವಣಿಗೆಯಾಗಿರುವುದು ಸಂತೋಷದ ವಿಷಯವಾಗಿದೆ
ಎಂ.ಜಿ. ಹಿರೇಮಠ,ಜಿಲ್ಲಾಧಿಕಾರಿ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.