ಬೆಳಗಾವಿ: ‘ರಾಣಿ ಚನ್ನಮ್ಮ ವಿಶ್ವವಿದ್ಯಾಲಯ (ಆರ್ಸಿಯು) ವ್ಯಾಪ್ತಿಯ ಬೆಳಗಾವಿ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳ ವ್ಯಾಪ್ತಿಯಲ್ಲಿ ಕೋವಿಡ್ ಲಸಿಕೆ ಪಡೆದ ವಿದ್ಯಾರ್ಥಿಗಳಿಗೆ ಜುಲೈ 15ರ ಬಳಿಕ ಎಲ್ಲ ಪದವಿ ಕೋರ್ಸ್ಗಳ ತರಗತಿಗಳನ್ನು ಆರಂಭಿಸಲಾಗುವುದು. ಲಸಿಕಾಕರಣ ಮುಗಿದ ನಂತರ ಪರೀಕ್ಷೆಗಳನ್ನೂ ನಡೆಸಲಾಗುವುದು’ ಎಂದು ಕುಲಪತಿ ಪ್ರೊ.ಎಂ. ರಾಮಚಂದ್ರಗೌಡ ತಿಳಿಸಿದರು.
ನಗರದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಕೋವಿಡ್ ಲಸಿಕಾ ಅಭಿಯಾನಕ್ಕೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು.
‘ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಬರುವ ಮೂರು ಜಿಲ್ಲೆಯ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ಒದಗಿಸುವಂತೆ ಆಯಾ ಕಾಲೇಜಿನ ಪ್ರಾಚಾರ್ಯರಿಗೆ ಸೂಚಿಸಲಾಗಿದೆ’ ಎಂದರು.
‘ಸರ್ಕಾರದ ಆದೇಶದ ಮೇರೆಗೆ ಅಭಿಯಾನವನ್ನು ಈ ಕಾಲೇಜಿನಲ್ಲಿ ಪ್ರಥಮ ಬಾರಿಗೆ ಆಯೋಜಿಸಿರುವುದು ಶ್ಲಾಘನೀಯ. ಪಡೆದವರು ಇತರರಿಗೆ ಜಾಗೃತಿ ಮೂಡಿಸುವ ಸಾಮಾಜಿಕ ಜವಾಬ್ದಾರಿ ನಿರ್ವಹಿಸಬೇಕು. ಲಸಿಕೆಯಿಂದ ಮಾತ್ರ ಸಮಾಜವನ್ನು ಉಳಿಸಲು ಸಾಧ್ಯ’ ಎಂದು ಹೇಳಿದರು.
ಪ್ರಾಚಾರ್ಯ ಡಾ.ಎಂ. ಜಯಪ್ಪ ಮಾತನಾಡಿ, ‘ಸರ್ಕಾರದ ಆದೇಶದಂತೆ ನಾವು ಮೊದಲ ಹಂತದಲ್ಲಿ 215 ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡಿದ್ದೇವೆ. ಮುಂಬರುವ ದಿನಗಳಲ್ಲಿ ಎಲ್ಲ 1450 ವಿದ್ಯಾರ್ಥಿಗಳಿಗೂ ಹಂತ ಹಂತವಾಗಿ ಒದಗಿಸಲಾಗುವುದು’ ಎಂದು ತಿಳಿಸಿದರು.
ಕುಲಸಚಿವ ಪ್ರೊ.ಬಸವರಾಜ ಪದ್ಮಶಾಲಿ, ವಾಣಿಜ್ಯ ಪ್ರಾಧ್ಯಾಪಕರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಪ್ರೊ.ಸಿ.ಆರ್. ಗುಡಸಿ, ಆರ್ಸಿಯು ವೈದ್ಯಾಧಿಕಾರಿ ಡಾ.ಯಶೋಧಾ ಪೋತದಾರ, ವಂಟಮೂರಿ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಜಯಾನಂದ ಡಿ. ಮಾತನಾಡಿದರು.
ಉಪ ಪ್ರಾಚಾರ್ಯ ಅನಿಲ ರಾಮದುರ್ಗ ಸ್ವಾಗತಿಸಿದರು. ಡಾ.ಜ್ಯೋತಿ ಪಾಟೀಲ ನಿರೂಪಿಸಿದರು. ಡಾ.ಮಲ್ಲೇಶ ದೊಡ್ಡಲಕ್ಕಣ್ಣವರ ವಂದಿಸಿದರು.