ಖಾನಾಪುರ: ವಾಹನದಟ್ಟಣೆಯಿಂದ ಕೂಡಿರುವ ಬೆಳಗಾವಿ–ಚೋರ್ಲಾ ರಾಜ್ಯ ಹೆದ್ದಾರಿಯ ಹಲವೆಡೆ ಆಳೆತ್ತರದ ತಗ್ಗು–ಗುಂಡಿಗಳು ಬಿದ್ದಿದ್ದರಿಂದ ವಾಹನ ಸವಾರರಿಗೆ ಸುಗಮ ಸಂಚಾರಕ್ಕೆ ಸಮಸ್ಯೆ ಉಂಟಾಗಿದೆ. ಈ ಹೆದ್ದಾರಿಯ ದುರವಸ್ಥೆ ಖಂಡಿಸಿದ ತಾಲ್ಲೂಕಿನ ಕಣಕುಂಬಿ, ಪಾರವಾಡ, ಚಿಗುಳೆ, ಮಾನ, ಸಡಾ ಹಾಗೂ ಅಕ್ಕಪಕ್ಕದ ಗ್ರಾಮಗಳ ಸಾರ್ವಜನಿಕರು ಸೋಮವಾರ ಕಣಕುಂಬಿಯ ಬಸ್ ನಿಲ್ದಾಣದ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಮಾಜಿ ಶಾಸಕ ಅರವಿಂದ ಪಾಟೀಲ ಮಾತನಾಡಿ, ಈ ಹೆದ್ದಾರಿ ಉತ್ತರ ಕರ್ನಾಟಕ, ದಕ್ಷಿಣ ಮಹಾರಾಷ್ಟ್ರ, ಆಂಧ್ರ ಪ್ರದೇಶ, ತೆಲಂಗಾಣ ರಾಜ್ಯಗಳನ್ನು ಗೋವಾ ರಾಜ್ಯದೊಂದಿಗೆ ಸೇರಿಸುವ ಪ್ರಮುಖ ಸಂಪರ್ಕ ಕೊಂಡಿಯಾಗಿದೆ. ಈ ಹೆದ್ದಾರಿಯ ಜಾಂಬೋಟಿ-ಕಣಕುಂಬಿ, ಸೂರಲ್ ಕ್ರಾಸ್-ಚೋರ್ಲಾ ಮತ್ತು ಕರ್ನಾಟಕ-ಗೋವಾ ಗಡಿಯ ಘಟ್ಟ ಪ್ರದೇಶದ ರಸ್ತೆಗಳಲ್ಲಿ ಆಳೆತ್ತರದ ಗುಂಡಿಗಳು ಬಿದ್ದಿದ್ದರಿಂದ ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ. ತಗ್ಗು ಗುಂಡಿಗಳನ್ನು ತಪ್ಪಿಸಲು ಹೋಗಿ ಸಾಕಷ್ಟು ವಾಹನಗಳು ಅಪಘಾತಕ್ಕೀಡಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯ ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ತಹಶೀಲ್ದಾರ್ ಪ್ರಕಾಶ ಗಾಯಕವಾಡ, ಪಿಐ ಮಂಜುನಾಥ ನಾಯ್ಕ ಹಾಗೂ ಇತರೆ ಅಧಿಕಾರಿಗಳು ಪ್ರತಿಭಟನಾಕಾರರನ್ನು ಭೇಟಿ ಮಾಡಿ ಅವರ ಸಮಸ್ಯೆ ಆಲಿಸಿದರು. ಬಳಿಕ ಈ ವಿಷಯವನ್ನು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ರಸ್ತೆಯ ಸಮಸ್ಯೆ ಬಗ್ಗೆ ಲೋಕೋಪಯೋಗಿ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದು, ಈ ರಸ್ತೆಯ ದುರಸ್ತಿ ಕಾಮಗಾರಿಗೆ ಮುಂದಿನ ಮೂರು ದಿನಗಳಲ್ಲಿ ಚಾಲನೆ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ ಎಂದು ತಹಶೀಲ್ದಾರ್ ಭರವಸೆ ನೀಡಿದರು.
ತಹಶೀಲ್ದಾರ್ ಅವರ ಮನವಿ ಮೇರೆಗೆ ಮಧ್ಯಾಹ್ನದ ಬಳಿಕ ಪ್ರತಿಭಟನೆ ಹಿಂಪಡೆದ ನಾಗರಿಕರು ವಾಹನಗಳ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.