ಬೆಳಗಾವಿ: ನಗರಪಾಲಿಕೆ ಸದಸ್ಯರ ಚುನಾವಣೆ ನಡೆಸುವಂತೆ ಒತ್ತಾಯಿಸಿ ಮಾಜಿ ನಗರಸೇವಕರ ಸಂಘದ ಸದಸ್ಯರು ಸೋಮವಾರ ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ಅವರಿಗೆ ಮನವಿ ಸಲ್ಲಿಸಿದರು.
‘ಪಾಲಿಕೆಯ ಸದಸ್ಯರ ಅಧಿಕಾರದ ಅವಧಿ ಮುಗಿದು ಹಲವು ತಿಂಗಳುಗಳೇ ಕಳೆದಿವೆ. ಆದರೆ, ಇಲ್ಲಿವರೆಗೂ ಚುನಾವಣೆ ನಡೆದಿಲ್ಲ. ಇದರಿಂದಾಗಿ ಸ್ಥಳೀಯ ಕೆಲಸಗಳು ಹಾಗೇ ಉಳಿದುಕೊಂಡಿವೆ. ಸಾರ್ವಜನಿಕರು ಹಲವಾರು ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ಚುನಾವಣೆ ನಡೆಸುವ ಮೂಲಕ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳಬೇಕು’ ಎಂದು ತಿಳಿಸಿದರು.
ಅಧ್ಯಕ್ಷ ನಾಗೇಶ ಸಾತೇರಿ ಮಾತನಾಡಿ, ‘ನಗರ ಸೇವಕರು ಇಲ್ಲದೆ ಇರುವುದರಿಂದ ಅಧಿಕಾರಿಗಳನ್ನು ಕೇಳುವವರೇ ಇಲ್ಲವಾಗಿದ್ದಾರೆ. ಕೂಡಲೇ ಚುನಾವಣೆ ನಡೆಸಲು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.