ಅದ್ಧೂರಿ ಗಣೇಶೋತ್ಸವಕ್ಕೆ ಅವಕಾಶ: ಆಗ್ರಹ

ಬೆಳಗಾವಿ: ‘ಈ ಬಾರಿ ಸಾರ್ವಜನಿಕ ಗಣೇಶೋತ್ಸವವನ್ನು ಅದ್ಧೂರಿಯಾಗಿ ಆಯೋಜಿಸಲು ಅನುಮತಿ ನೀಡಬೇಕು’ ಎಂದು ಒತ್ತಾಯಿಸಿ ಶಹಾಪುರ ಸಾರ್ವಜನಿಕ ಗಣೇಶೋತ್ಸವ ಮಂಡಳಿಯವರು ಜಿಲ್ಲಾಧಿಕಾರಿ ಕಚೇರಿಗೆ ಮಂಗಳವಾರ ಮನವಿ ಸಲ್ಲಿಸಿದರು.
‘ಹೋದ ಬಾರಿ ಕೋವಿಡ್ ಕಾರಣದಿಂದಾಗಿ ಸರಳವಾಗಿ ಗಣೇಶೋತ್ಸವ ಆಚರಿಸಲಾಯಿತು. ಸಾರ್ವಜನಿಕವಾಗಿ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಗೆ ಅವಕಾಶವಿರಲಿಲ್ಲ. ಈ ಬಾರಿ ಕೋವಿಡ್ ಪ್ರಕರಣಗಳು ತಗ್ಗಿರುವುದರಿಂದಾಗಿ ಸಂಭ್ರಮದಿಂದ ಮತ್ತು ದೊಡ್ಡಮಟ್ಟದಲ್ಲಿ ಆಯೋಜಿಸಲು ನಿರ್ಬಂಧ ಹೇರಬಾರದು’ ಎಂದು ಒತ್ತಾಯಿಸಿದರು.
ಕಾರ್ಯಾಧ್ಯಕ್ಷ ರಮೇಶ ಸೊಂಟಕ್ಕಿ ಮಾತನಾಡಿ, ‘ಕಳೆದ ಬಾರಿ ಗಣೇಶೋತ್ಸವವನ್ನು ಸರಳವಾಗಿ ಆಚರಿಸಿ ಜಿಲ್ಲಾಡಳಿತಕ್ಕೆ ಸಹಕಾರ ನೀಡಿದ್ದೇವೆ. ಈ ವರ್ಷ ಲಾಕ್ಡೌನ್ ತೆರವಾಗಿದೆ. ಆದ್ದರಿಂದ ಅದ್ದೂರಿ ಗಣೇಶೋತ್ಸವಕ್ಕೆ ಅವಕಾಶ ಕೊಡಬೇಕು. ಹಬ್ಬಕ್ಕೆ ಒಂದು ವಾರ ಇರುವಾಗ ಮೂರ್ತಿಗಳ ಎತ್ತರಕ್ಕೆ ನಿರ್ಬಂಧ ಹೇರುವುದನ್ನು ಕೈಬಿಡಬೇಕು. ಒಂದು ವೇಳೆ ನಿಯಮ ಜಾರಿಗೊಳಿಸುವುದಿದ್ದರೆ ಮುಂಚಿತವಾಗಿಯೇ ತಿಳಿಸಬೇಕು. ಇಲ್ಲವಾದರೆ ಮೂರ್ತಿಕಾರರಿಗೆ ಅನ್ಯಾಯವಾಗುತ್ತದೆ ಮತ್ತು ನಷ್ಟವೂ ಉಂಟಾಗುತ್ತದೆ’ ಎಂದು ಕೋರಿದರು.
ಅಧ್ಯಕ್ಷ ನೇತಾಜಿ ಜಾಧವ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.