ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಳಗಾವಿ | ಶೇ 25ರಷ್ಟು ಅಪಘಾತ ತಗ್ಗಿಸಲು ಸೂಚನೆ

Published 20 ಫೆಬ್ರುವರಿ 2024, 4:28 IST
Last Updated 20 ಫೆಬ್ರುವರಿ 2024, 4:28 IST
ಅಕ್ಷರ ಗಾತ್ರ

ಬೆಳಗಾವಿ: ‘ಬೆಳಗಾವಿ ನಗರ ಹಾಗೂ ಜಿಲ್ಲೆಯಾದ್ಯಂತ ಪ್ರಸಕ್ತ ಸಾಲಿನಲ್ಲಿ ಕನಿಷ್ಠ ಶೇ 25ರಷ್ಟು ಅಪಘಾತಗಳನ್ನು ಕಡಿಮೆಗೊಳಿಸಲು ಕ್ರಮ ತೆಗೆದುಕೊಳ್ಳಬೇಕು’ ಎಂದು ನಗರ ಪೊಲೀಸ್ ಆಯುಕ್ತ ಎಸ್.ಎನ್.ಸಿದ್ದರಾಮಪ್ಪ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ‌ ಸಭೆಯಲ್ಲಿ ಮಾತನಾಡಿದ ಅವರು, ‘ಹೆಲ್ಮೆಟ್ ಇಲ್ಲದೇ ಸಂಚರಿಸುವವರ ಚಾಲನಾ ಪರವಾನಗಿ ಅಮಾನತುಗೊಳಿಸಬೇಕು. ನಗರದ ಆಯ್ದ ಪ್ರಮುಖ ಸ್ಥಳಗಳಲ್ಲಿ ಮುಂಗಡ ಟಿಕೆಟ್‌ ಪಡೆಯಲು ಆಟೊಕೌಂಟರ್‌ ವ್ಯವಸ್ಥೆ ಕಲ್ಪಿಸಲು ಕ್ರಮ ವಹಿಸಬೇಕು’ ಎಂದು ತಿಳಿಸಿದರು.

‘ನಗರದ ಫುಟ್‌ಪಾತ್‌ಗಳಲ್ಲಿ ಕುಳಿತುಕೊಳ್ಳುವ ಬೀದಿ ವ್ಯಾಪಾರಿಗಳಿಂದ ಮಹಾನಗರ ಪಾಲಿಕೆಯವರು ಕರ ವಸೂಲಿ ಮಾಡುತ್ತಿರುವುದರಿಂದ ಅಂತಹ ವ್ಯಾಪಾರಿಗಳನ್ನು ತೆರವುಗೊಳಿಸುವುದು ಕಷ್ಟವಾಗುತ್ತಿದೆ. ಆದ್ದರಿಂದ ಈ ಬಗ್ಗೆ ಪಾಲಿಕೆ ಗಮನಹರಿಸಬೇಕು’ ಎಂದು ಸಿದ್ದರಾಮಪ್ಪ ತಿಳಿಸಿದರು.

‘ದೇಶದಾದ್ಯಂತ ಅಪಘಾತ ಪ್ರಮಾಣವನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ಸುಪ್ರೀಂಕೋರ್ಟ್‌ ನಿರಂತರ ನಿಗಾ ವಹಿಸುತ್ತಿದೆ. ಆದ್ದರಿಂದ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಸಭೆಗೆ ಹಾಜರಾಗುವುದರ ಜತೆಗೆ ತಮಗೆ ನಿಗದಿಪಡಿಸಿದ ಕೆಲಸಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ತಿಳಿಸಿದರು.

‘ಹೆದ್ದಾರಿ ಅಥವಾ ಜಿಲ್ಲಾ ಮುಖ್ಯರಸ್ತೆಗೆ ಕೂಡುವ ಕಡೆಗಳಲ್ಲಿ ಸೂಕ್ತ ಬೆಳಕಿನ ವ್ಯವಸ್ಥೆ ಕಲ್ಪಿಸಬೇಕು. ರಸ್ತೆ ಸರಿಯಾಗಿ ಕಾಣಿಸಲು ಅನುಕೂಲವಾಗುವಂತೆ ಗಿಡಗಂಟಿ, ಪೊದೆಯನ್ನು ಕತ್ತರಿಸಬೇಕು’ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

‘ಕಬ್ಬು ಸಾಗಣೆ ಮಾಡುವ ಹಾಗೂ ಇತರೆ ಟ್ರ್ಯಾಕ್ಟರ್ ಹಾಗೂ ಟ್ರೇಲರ್‌ಗಳಿಗೆ ಕಡ್ಡಾಯವಾಗಿ ರಿಫ್ಲೆಕ್ಟರ್ ಅಳವಡಿಸಲು ವಿಶೇಷ ಅಭಿಯಾನ ಹಮ್ಮಿಕೊಳ್ಳಲು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಕ್ರಮ ವಹಿಸಬೇಕು’ ಎಂದರು.

ಲೋಕೋಪಯೋಗಿ ಇಲಾಖೆಯ ಅಧೀಕ್ಷಕ ಎಂಜಿನಿಯರ್ ಹಾಗೂ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿಯ ಸದಸ್ಯ ಕಾರ್ಯದರ್ಶಿ ಅರುಣ ಕುಮಾರ್ ಪಾಟೀಲ, ‘ಅಪಘಾತ ವಲಯಗಳನ್ನು ಸಂಬಂಧಿತ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ಪರಿಶೀಲಿಸಿ, ಮುಂಬರುವ ದಿನಗಳಲ್ಲಿ ಅಪಘಾತಗಳ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು’ ಎಂದು ತಿಳಿಸಿದರು.

ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಎಸ್.ಬಿ.ಸೊಬರದ, ಸಮಿತಿಯ ಸದಸ್ಯರಾದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹೇಶ್ ಕೋಣಿ, ಸಾರಿಗೆ ಇಲಾಖೆಯ ಡಿಟಿಒ ಲಮಾಣಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ನಾಗೇಶ್ ಮುಂಡಾಸ, ವಾರ್ತಾಧಿಕಾರಿ ಗುರುನಾಥ ಕಡಬೂರ ಸೇರಿದಂತೆ ಲೋಕೋಪಯೋಗಿ, ಪೊಲೀಸ್, ಸಾರಿಗೆ ಇಲಾಖೆ, ಮಹಾನಗರ ಪಾಲಿಕೆ ಮತ್ತಿತರ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಇದ್ದರು.

ನಗರದ ಕೆಲವು ಪ್ರದೇಶಗಳಲ್ಲಿ ಖಾಸಗಿ ಬಸ್‌ಗಳನ್ನು ನಿಲ್ಲಿಸುವುದರಿಂದ ಸಂಚಾರಕ್ಕೆ ತೊಂದರೆ ಆಗುತ್ತಿದೆ. ಫುಟ್‌ಪಾತ್‌ ಅತಿಕ್ರಮಣದಿಂದ ಜನಸಂಚಾರಕ್ಕೂ ಕಷ್ಟವಾಗುತ್ತಿದೆ - ಅರುಣ ಕುಮಾರ್‌ ಪಾಟೀಲ ಸದಸ್ಯ ಕಾರ್ಯದರ್ಶಿ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ

ಜಿಲ್ಲೆಯಲ್ಲಿ ಮೂರು ವರ್ಷಗಳಲ್ಲಿ 17 ಅಪಘಾತ ವಲಯ ಗುರುತಿಸಲಾಗಿದೆ. ಅಲ್ಲಿ ಅಪಘಾತಗಳನ್ನು ತಡೆಗಟ್ಟವುದಕ್ಕೆ ಅಧಿಕಾರಿಗಳು ಮುಂದಾಗಬೇಕು- ಡಾ.ಭೀಮಾಶಂಕರ ಗುಳೇದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ

ನಗರದ ಪ್ರಮುಖ ವೃತ್ತ ಮತ್ತು ರಸ್ತೆಗಳಲ್ಲಿ ಪಾದಚಾರಿಗಳಿಗೆ ಅನುಕೂಲವಾಗುವಂತೆ ಝಿಬ್ರಾ ಕ್ರಾಸಿಂಗ್ ಮತ್ತಿತರ ಮಾರ್ಕಿಂಗ್ ಹಾಗೂ ಸಂಚಾರ ಚಿಹ್ನೆಗಳನ್ನು ಅಳವಡಿಸುವ ಅಗತ್ಯ- ಪಿ.ವಿ.ಸ್ನೇಹಾ ಡಿಸಿಪಿ ಬೆಳಗಾವಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT